ಹುಬ್ಬಳ್ಳಿ:ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಭಯದಿಂದ ಬಿಜೆಪಿ ನಾಯಕರಿಗೆ ತೀವ್ರ ಹತಾಶೆ ಕಾಡುತ್ತಿದ್ದು, ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಇಲ್ಲಸಲ್ಲದ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಶ್ಫಾಕ್ ಕುಮಟಾಕರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಚುನಾವಣಾ ಆಯೋಗದ ಆದೇಶದಂತೆ ಬಿಎಲ್ಓಗಳು ಅತ್ಯಂತ ಪಾರದರ್ಶಕವಾಗಿ ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಈ ಪ್ರಕ್ರಿಯೆಯನ್ನು ಸಹಿಸದ ಬಿಜೆಪಿಗರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಆರ್. ಅಶೋಕ ಹಾಗೂ ಬಸವರಾಜ ಬೊಮ್ಮಾಯಿ ಅವರು ಸೋಲಿನ ಭೀತಿಯಿಂದಲೇ ಇಂತಹ ಬೇಜವಾಬ್ದಾರಿ ಆರೋಪಗಳನ್ನು ಮಾಡುತ್ತಿದ್ದಾರೆ" ಎಂದು ಕಿಡಿಕಾರಿದರು.
ಬಿಜೆಪಿಯ ಈ ಅನಗತ್ಯ ಒತ್ತಡ ಮತ್ತು ಕಿರುಕುಳದಿಂದಾಗಿ ಈಗಾಗಲೇ ಇಬ್ಬರು ಅಧಿಕಾರಿಗಳು ಅಕಾಲಿಕ ಸಾವಿಗೀಡಾಗಿದ್ದಾರೆ. ಎಸ್ಐಆರ್ ಪ್ರಕ್ರಿಯೆ ನಿಲ್ಲಿಸುವಂತೆ ಆಗ್ರಹಿಸುತ್ತಿರುವ ಬಿಜೆಪಿ ಮುಖಂಡರ ನಡೆ ದೇಶದ ಸ್ವಾಯತ್ತ ಸಂಸ್ಥೆಯಾದ ಚುನಾವಣಾ ಆಯೋಗಕ್ಕೆ ಮಾಡುತ್ತಿರುವ ಅಪಮಾನವಾಗಿದೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವರದಿ:ಸುಧೀರ್ ಕುಲಕರ್ಣಿ


