ಹುಬ್ಬಳ್ಳಿ: ಯುವಜನರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು, ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದು ಹಾಗೂ ಅಂಗಾಂಗ ದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಹುಬ್ಬಳ್ಳಿ-ಧಾರವಾಡದಲ್ಲಿ ಆಗಸ್ಟ್ 9ರಂದು ‘ನಶಾ ಮುಕ್ತ ಭಾರತ – ಯುವ ಶುದ್ದಿ ಅಭಿಯಾನ ವಾಕಥಾನ್ ಮತ್ತು ಬೈಕ್ ರ್ಯಾಲಿ’ ಹಾಗೂ ‘ಅಂಗಾಂಗ ದಾನ’ ಜಾಗೃತಿ ಅಭಿಯಾನವನ್ನು ಅದ್ದೂರಿಯಾಗಿ ಆಯೋಜಿಸಲಾಗಿದೆ ಎಂದು ಡಾ.ಶ್ರೀನಿವಾಸ ಬನ್ನಿಗೋಳ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಜಿಲ್ಲಾ ವ್ಯಾಪ್ತಿಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್ಜಿಯುಎಚ್ಎಸ್) ಸಂಯೋಜನೆಗೊಳಪಟ್ಟಿರುವ ಕಾಲೇಜುಗಳ ಸಂಘ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ದಿಶಾಬೋದ್ ಫೌಂಡೇಶನ್ ಹಾಗೂ ಕೇಂದ್ರ ಸರ್ಕಾರದ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಸಂಯುಕ್ತ ಆಶ್ರಯದಲ್ಲಿ ಈ ರಾಜ್ಯಮಟ್ಟದ ಅಭಿಯಾನ ನಡೆಯಲಿದೆ ಎಂದರು.
ಆಗಸ್ಟ್ 9ರಂದು ಬೆಳಿಗ್ಗೆ 7.30ಕ್ಕೆ ವಿದ್ಯಾನಗರದ ಬಿವಿಬಿ ಕ್ಯಾಂಪಸ್ನಲ್ಲಿರುವ ಕೆಎಲ್ಇ ಸಂಸ್ಥೆಯ ಶುಶ್ರೂಷಾ ವಿಜ್ಞಾನ ಮಹಾವಿದ್ಯಾಲಯದ ಓಪನ್ ಗ್ರೌಂಡ್ನಿಂದ ವಾಕಥಾನ್ ಮತ್ತು ಬೈಕ್ ರ್ಯಾಲಿಗೆ ಕೇಂದ್ರ ಶಿಕ್ಷಣ, ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಹುಬ್ಬಳ್ಳಿ ರುದ್ರಾಕ್ಷಿಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ. ಬಸವಲಿಂಗ ಸ್ವಾಮೀಜಿ ಹಾಗೂ ಇಳಕಲ್ನ ಚಿತ್ತರಗಿ ಶ್ರೀ ವಿಜಯಮಹಾಂತ ಸಂಸ್ಥಾನಮಠದ ಶ್ರೀ ಮ.ನಿ.ಪ್ರ. ಡಾ. ಗುರುಮಹಾಂತ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಡಾ. ಭಗವಾನ್ ಬಿ.ಸಿ. ಅವರು ನಶಾಮುಕ್ತಿ ಹಾಗೂ ಆರೋಗ್ಯಕರ ಬದುಕಿನ ಪ್ರತಿಜ್ಞಾ ವಿಧಿ ಬೋಧಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಈ ಬೃಹತ್ ಜಾಗೃತಿ ಅಭಿಯಾನದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕಾರಿಗಳು, ಸಿಬ್ಬಂದಿ, ಸೆನೆಟ್, ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಹುಬ್ಬಳ್ಳಿ-ಧಾರವಾಡ ಜಿಲ್ಲಾ ವ್ಯಾಪ್ತಿಯ ಆರ್ಜಿಯುಎಚ್ಎಸ್ಗೆ ಸಂಯೋಜನೆಗೊಂಡಿರುವ ಸುಮಾರು 42 ಆರೋಗ್ಯ ವಿಜ್ಞಾನ ಕಾಲೇಜುಗಳ ಆಡಳಿತ ಮಂಡಳಿಯ ಅಧ್ಯಕ್ಷರು, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ, ಯುವಜನರಲ್ಲಿ ಆರೋಗ್ಯಕರ ಜೀವನ ಮೌಲ್ಯಗಳ ಬೆಳೆಸುವಿಕೆ ಹಾಗೂ ಅಂಗಾಂಗ ದಾನದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಅಭಿಯಾನ ರಾಜ್ಯದಲ್ಲೇ ಮಾದರಿಯಾಗುವ ನಿರೀಕ್ಷೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಡಾ. ಎಂ. ಜೀವಣ್ಣನವರ, ಡಾ. ಕ್ರಾಂತಿಕಿರಣ, ಡಾ.ಉದಯ್ ಬಾಂಧೆ, ಡಾ.ವಿರೇಶ ಹಂಚಿನಾಳ, ಡಾ.ಪ್ರಶಾಂತ ಎ.ಎಸ್, ಡಾ.ಸತೀಶ ಇರಕಲ್, ಡಾ.ಸಿದ್ದನಗೌಡ ಪಾಟೀಲ್, ಡಾ.ಸಂಜಯ ಪೀರಾಪುರ, ಡಾ.ವಿಜಯಾನಂದ ಪೂಜಾರಿ, ಡಾ.ರೈಚೆಲ್ ಅಬ್ನೇಸ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ವರದಿ:ಸುಧೀರ್ ಕುಲಕರ್ಣಿ


