ಶಿವಮೊಗ್ಗ: ಬಿಜೆಪಿ ಬಿಟ್ಟು ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ತಮ್ಮನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ ಎಂದಿರುವ ಅವರು, ಪಕ್ಷದಲ್ಲಿನ ಗೊಂದಲಗಳು ಸರಿಯಾದರೆ ಮಾತ್ರ ಮರಳಿ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಬಿಜೆಪಿ ನನ್ನ ಮಾತೃ ಪಕ್ಷವಾಗಿದೆ. ಆದರೆ ಬಿಜೆಪಿಯಲ್ಲಿ ಕೆಲ ಗೊಂದಲಗಳಿದ್ದು, ಅವು ಸರಿಯಾಗಬೇಕು.
ಸಂಘಟನೆ ದೃಷ್ಟಿಯಿಂದ ಪಕ್ಷದಲ್ಲಿ ಕೆಲವು ಬದಲಾವಣೆಗಳು ಆಗಬೇಕಾಗಿದೆ. ಆ ಬದಲಾವಣೆಗಳು ಪಕ್ಷದ ಹಿತದೃಷ್ಟಿಯಿಂದ ನಡೆದರೆ ಒಳ್ಳೆಯದು ಎಂದರು.
ನಾನು ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದೇನೆ. ಆದರೆ ಅವು ಬಿಜೆಪಿಗೆ ಮರಳಲು ಹಾಕಿರುವ ಷರತ್ತುಗಳಲ್ಲ. ಬಿಜೆಪಿ ಸೇರ್ಪಡೆಗೆ ಯಾವುದೇ ಷರತ್ತು ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು... ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ಹಿರಿಯರು ಕಟ್ಟಿದ ಕಾಂಗ್ರೆಸ್ ಪಕ್ಷ ಇಂದು ಬೀದಿಗೆ ಬಂದಿದೆ ಎಂದು ಟೀಕಿಸಿದರು.
1885ರಲ್ಲಿ ರಾಷ್ಟ್ರಭಕ್ತರು ಸೇರಿ ಕಟ್ಟಿದ ಕಾಂಗ್ರೆಸ್ ಪಕ್ಷ ಈಗ ಅಧಿಕಾರಕ್ಕಾಗಿ ಕೆಳಮಟ್ಟಕ್ಕೆ ಇಳಿದಿದೆ. ರಾಜ್ಯ ಕಾಂಗ್ರೆಸ್ನಲ್ಲಿ ಸ್ವಾರ್ಥವೇ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.
ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಕಾರಣ ಹಲವು ಶಾಸಕರು ಅತೃಪ್ತರಾಗಿದ್ದಾರೆ. ಅವರ ಬೆಂಬಲಿಗರು ಮುಖ್ಯಮಂತ್ರಿ ವಿರುದ್ಧವೇ ಧಿಕ್ಕಾರ ಕೂಗುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಕೆಲ ಶಾಸಕರಿಗೆ ಸಚಿವ ಸ್ಥಾನ ಕೊಡಿಸುವ ಭರವಸೆ ನೀಡಿದ್ದರು ಎಂದೂ ಈಶ್ವರಪ್ಪ ಆರೋಪಿಸಿದರು.


