ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರ ಮನೆ ಹಾಗೂ ಆಪ್ತರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ನಡೆಸುತ್ತಿರುವ ಶೋಧ ಕಾರ್ಯವನ್ನು (Raid) ಖಂಡಿಸಿ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸಚಿವ ಬೆಂಬಲಿಗರು ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಪಟ್ಟಣದ ಪ್ರಮುಖ ಕೇಂದ್ರವಾದ ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ 500ಕ್ಕೂ ಹೆಚ್ಚು ಬೆಂಬಲಿಗರು, ಸಾಲಾಗಿ ನಿಂತು ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಗುರಿಯಾಗಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.
ಪ್ರತಿಭಟನೆಯ ಭಾಗವಾಗಿ ಜೇವರ್ಗಿ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೆಲಕಾಲ ರಸ್ತೆ ತಡೆ ನಡೆಸಲಾಯಿತು. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.
ಸಚಿವರ ವಿರುದ್ಧ ನಡೆಯುತ್ತಿರುವ ಈ ಕ್ರಮವು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದ್ದು, ಇಂತಹ ತಂತ್ರಗಳಿಗೆ ಸಚಿವರಾಗಲಿ ಅಥವಾ ಅವರ ಬೆಂಬಲಿಗರಾಗಲಿ ಹೆದರುವುದಿಲ್ಲ ಎಂದು ಪ್ರತಿಭಟನಾ ನಿರತ ನಾಯಕರು ಎಚ್ಚರಿಸಿದರು.


