ತುರುವೇಕೆರೆ : ತಾಲ್ಲೂಕು ಬಿಜೆಪಿ ಯುವಮೋರ್ಚಾ ವತಿಯಿಂದ ಜೂನ್ 5 ವಿಶ್ವಪರಿಸರ ದಿನದಂದು ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯುವಮೋರ್ಚಾ ಅಧ್ಯಕ್ಷ ತೀರ್ಥಕುಮಾರ್ (ತಿಲಿ) ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಮ್ಮ ಭೂಮಿ, ನಮ್ಮ ಪರಿಸರ, ನಮ್ಮ ಜವಾಬ್ದಾರಿ ಎಂಬ ಪರಿಕಲ್ಪನೆಯಡಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಪ್ರತಿ ಬೂತ್ ನಲ್ಲಿ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಪರಿಸರ ಉಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
ಪರಿಸರ ದಿನಾಚರಣೆಯಂದು ನಡೆಯುವ ಈ ಸಸಿ ನೆಡುವ ಕಾರ್ಯಕ್ರಮಕ್ಕೆ ನಿಕಟಪೂರ್ವ ಶಾಸಕ ಮಸಾಲಾ ಜಯರಾಮ್ ಚಾಲನೆ ನೀಡಲಿದ್ದು, ಭಾರತೀಯ ಜನತಾ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾಗರೀಕರೂ ಸಹ ಈ ಪರಿಸರ ಉಳಿಸುವ ಕಾರ್ಯದಲ್ಲಿ ಕೈಜೋಡಿಸಬಹುದಾಗಿದೆ. ಪ್ರತಿಯೊಬ್ಬರೂ ತಮ್ಮ ತಾಯಿಯವರ ಹೆಸರಿನಲ್ಲಿ ಒಂದು ಗಿಡವನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪ್ರಕೃತಿ ಸಂಪತ್ತನ್ನು ಉಳಿಸಲು ನಮ್ಮೊಂದಿಗೆ ಸಹಕಾರ ನೀಡಬೇಕೆಂದರು.
ವರದಿ: ಗಿರೀಶ್ ಕೆ ಭಟ್

