ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ.
ಒಂದು ವೇಳೆ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 2028ರಲ್ಲೂ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ನಾಯಕತ್ವ, ಗೃಹಲಕ್ಷ್ಮಿಯೋಜನೆ ಪರಿಷ್ಕರಣೆ ಹಾಗೂ ಖಾತೆ ಹಂಚಿಕೆ ಕುರಿತಂತೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ.
ಕಷ್ಟಪಟ್ಟು ಕೆಲಸ ಮಾಡಿದವರಿಗೆ ಅದಕ್ಕೆ ತಕ್ಕ ಕೂಲಿ ಸಿಗಬೇಕು ಎಂಬುದಕ್ಕೆ ನನ್ನ ಸಂಪೂರ್ಣ ಸಹಮತವಿದೆ. 2028ರ ವಿಧಾನಸಭೆ ಚುನಾವಣೆಯನ್ನು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲೇ ಎದುರಿಸಲು ನಾವೆಲ್ಲರೂ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ.
ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದಾಗಿ ಖುದ್ದಾಗಿ ಮುಖ್ಯಮಂತ್ರಿಗಳೇ ಹೇಳುತ್ತಿದ್ದಾರೆ, ಇದು ಸಂತೋಷದ ವಿಚಾರ ಮತ್ತು ಇದಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದರು.
ಇದೇ ವೇಳೆ ತಮಗೇನು ಸಿಎಂ ಆಗುವ ಆತುರವಿಲ್ಲ, ಇನ್ನೂ ವಯಸ್ಸಿದೆ ಎಂದು ಸ್ಪಷ್ಟಪಡಿಸಿದ ಅವರು, ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿರುವ ಅವಕಾಶವನ್ನು ಅವರು ಯಶಸ್ವಿಯಾಗಿ ನಿಭಾಯಿಸಲಿ ಎಂದು ಹಾರೈಸಿದರು.


