ತುರುವೇಕೆರೆ : ಸ್ವಾತಂತ್ರ್ಯ ಕೇವಲ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ, ಎಲ್ಲರಿಗೂ ಸಿಕ್ಕಿದೆ. ಆದ್ದರಿಂದ ಪ್ರತಿಯೊಬ್ಬ ನಾಗರೀಕರು ಆಗಸ್ಟ್ 15 ರಂದು ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಆಡಳಿತದಿಂದ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ಎಲ್ಲಾ ಇಲಾಖಾ ಅಧಿಕಾರಿಗಳು, ಶಿಕ್ಷಕರು, ಗ್ರಾಮ ಪಂಚಾಯ್ತಿ ಪಿಡಿಒ, ಕಾರ್ಯದರ್ಶಿ, ನೌಕರರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಇಲಾಖಾಧಿಕಾರಿಗಳು ತಮಗೆ ಕೊಟ್ಟ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಶಾಂತಿಯುತ ಸಂಭ್ರಮದದಲ್ಲಿ ಆಚರಣೆ ನಡೆಯುವಂತೆ ಕ್ರಮ ಕೈಗೊಳ್ಳಬೇಕೆಂದರು.
ತಹಸೀಲ್ದಾರ್ ಕುಂಇ ಅಹಮದ್ ಮಾತನಾಡಿ, ಪಟ್ಟಣದ ಕ್ರೀಡಾಂಗಣದಲ್ಲಿ ೮೦ನೇ ಸ್ವಾತಂತ್ರö್ಯ ದಿನಾಚರಣೆಯನ್ನು ಆಚರಿಸಲು ತೀರ್ಮಾನಿಸಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕರು, ಕ್ರೀಡಾಪಟುಗಳನ್ನು ಸನ್ಮಾನಿಸಲಾಗುವುದು. ವೇದಿಕೆ, ವಿದ್ಯಾರ್ಥಿಗಳಿಗೆ ಬಿಸ್ಕೆಟ್, ನೀರು, ಲಘು ಉಪಹಾರ, ಸನ್ಮಾನ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಜವಾಬ್ದಾರಿಯನ್ನು ಹೊತ್ತವರು ಸಮರ್ಥವಾಗಿ ನಿಭಾಯಿಸಬೇಕು, ಯಾವುದೇ ಲೋಪಗಳಾಗಬಾರದ. ಬಿಇಒ ಕಛೇರಿಯಿಂದ ವಿವಿಧ ಇಲಾಖೆಯ ಅಲಂಕೃತ ಸ್ಟ್ಯಾಬ್ಲೋ ಮೆರವಣಿಗೆಯೊಂದಿಗೆ ಕ್ರೀಡಾಂಗಣಕ್ಕೆ ತೆರಳಬೇಕಿದ್ದು, ಶಾಲಾ ವಿದ್ಯಾರ್ಥಿಗಳು ಮಾತ್ರವಲ್ಲದೆ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ಇಒ ಅನಂತರಾಜು, ಮುಖ್ಯಾಧಿಕಾರಿ ಶ್ರೀನಾಥ್ ಬಾಬು, ಬಿಇಒ ಸೋಮಶೇಖರ್, ಸಮಾಜ ಕಲ್ಯಾಣಾಧಿಕಾರಿ ರಮೇಶ್ ನಾಯಕ್, ಆಹಾರ ಇಲಾಖೆಯ ಹರೀಶ್, ವಿವಿಧ ಇಲಾಖಾ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್


