ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಸಮೀಪ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ರಮಾನಾಥ ರೈ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರ್ಕಳ-ಮೂಡುಬಿದಿರೆ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನಗಳಿಗೆ ಏಕಮುಖ (ಒನ್ ವೇ) ಸಂಚಾರ ಕಲ್ಪಿಸಲಾಗಿತ್ತು.
ರಮಾನಾಥ ರೈ ಅವರು ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಮೂಡುಬಿದಿರೆ ಮಾರ್ಗವಾಗಿ ಎದುರಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ತೀವ್ರ ಪೆಟ್ಟು ತಿಂದಿದ್ದ ಕಾರು ಚಾಲಕ ಹಾಗೂ ಸಣ್ಣಪುಟ್ಟ ಗಾಯಗಳಾಗಿದ್ದ ರಮಾನಾಥ ರೈ ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


