ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸ್ ಇಲಾಖೆ ವಿಶೇಷ ತನಿಖಾ ತಂಡ ರಚನೆ ಮಾಡಿದೆ.
ಬೆಂಗಳೂರಿನ ಕಗ್ಗಲಿಪುರದ ತಾಅತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.ಜಿಲೆಟಿನ್ ಕಡ್ಡಿಗಳನ್ನು ಇಟ್ಟಿದ್ದ್ ಓರ್ವನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆಗೆ ರಾಮನಗರ ಡಿವೈ ಎಸ್ ಪಿ ಶ್ರೀನಿವಾಸ್ ನೇತೃವತದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
ತನಿಖಾ ತಂಡದಲ್ಲಿ ನಾಲ್ವರು ಇನ್ಸ್ ಪೆಕ್ಟರ್ ಗಳು ಸೇರಿ ಒಟ್ಟು 50 ಸಿಬ್ಬಂದಿಗಳು ಇರಲಿದ್ದಾರೆ. ಒಟ್ಟು ಆರು ತಂಡಗಳನ್ನು ರಾಮನಗರ ಎಸ್ ಪಿ ರಚನೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಗೆ ಭೇಟಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ಅವರು ಸಂಚರಿಸುವ ರಸ್ತೆಯ ಬಳಿ ಕಗ್ಗಲಿಪುರದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.
ಇದೇ ಮಾರ್ಗವಾಗಿ ಪ್ರಧಾನಿ ಮೋದಿ ಸಂಚರಿಸಿದ್ದು, ಈ ವೇಳೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಆಶ್ರಮದ ಕಾರ್ಯಕ್ರಮದಿಂದ 2 ಕಿ.ಮೀ ದೂರದಲ್ಲಿ ಪ್ರಧಾನಿ ಮೋದಿ ತೆರಳುವ ರಸ್ತೆಯಿಂದ ಸುಮಾರು 50 ಮೀಟರ್ ದೂರದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ತನಿಖೆ ಚುರುಕುಗೊಳಿಸಿದೆ.

