ವಿಜಯಪುರ: ಕರ್ನಾಟಕ ಮಾದರ ಮಹಾಸಭೆಗೆ 12 ಎಕರೆ ಸರ್ಕಾರಿ ಭೂಮಿಯನ್ನು ಮಂಜೂರು ಮಾಡಿರುವ ರಾಜ್ಯ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ರವಿಕುಮಾರ ಹೊಸಮನಿ ಸ್ವಾಗತಿಸಿ, ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಮಾದರ–ಮಾದಿಗ ಸಮುದಾಯದ ಸಬಲೀಕರಣ ಹಾಗೂ ಅಭಿವೃದ್ಧಿಗೆ ಕರ್ನಾಟಕ ಮಾದರ ಮಹಾಸಭೆಗೆ 12 ಎಕರೆ ಸರ್ಕಾರಿ ಭೂಮಿ ಮಂಜೂರು ಮಾಡಿರುವುದು ಅತ್ಯಂತ ಮಹತ್ವದ ಹಾಗೂ ದಿಟ್ಟ ನಿರ್ಧಾರವಾಗಿದೆ. ಈ ನಿರ್ಧಾರವು ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಪ್ರಗತಿಗೆ ಮತ್ತಷ್ಟು ಬಲ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು, ಹಿರಿಯ ಸಚಿವರಾದ ಕೆ.ಎಚ್. ಮುನಿಯಪ್ಪ, ಶೋಷಿತರ ಗಟ್ಟಿ ಧ್ವನಿಯಾಗಿರುವ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಲೋಕಸಭಾ ಸದಸ್ಯ ಬಿ.ಎನ್. ಚಂದ್ರಪ್ಪ, ಮಾಜಿ ಸಚಿವ ಶಿವಣ್ಣ, ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನಾ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ ಸೇರಿದಂತೆ ಹಲವು ಮುಖಂಡರ ನೇತೃತ್ವದಲ್ಲಿ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ ಅವರನ್ನು ಅಭಿನಂದಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು.
ಸರ್ಕಾರದ ಈ ಮಹತ್ವದ ನಿರ್ಧಾರವು ಮಾದರ–ಮಾದಿಗ ಸಮುದಾಯದ ಒಗ್ಗಟ್ಟು, ಸಂಘಟನೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ರವಿಕುಮಾರ ಹೊಸಮನಿ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ವರದಿ: ಸಾಯಬಣ್ಣ ಮಾದರ


