ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ.
ಇಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ದೇವೇಗೌಡರ (HD Deve Gowda) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ಖುದ್ದಾಗಿ ಭೇಟಿ ನೀಡಿ, ಹಿರಿಯ ನಾಯಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೂ ಕೂಡ ದೇವೇಗೌಡರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಚೆನ್ನಮ್ಮ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದರು.
ಈ ವಿಚಾರವಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಮಾಜಿ ಪ್ರಧಾನಿ ಶ್ರೀ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮನವರು ನಿಧನರಾದ ಹಿನ್ನೆಲೆಯಲ್ಲಿ ಇಂದು ಮಾನ್ಯ ದೇವೇಗೌಡರ ಪದ್ಮನಾಭ ನಗರದ ನಿವಾಸಕ್ಕೆ ಭೇಟಿ ನೀಡಿ ಸಂತಾಪ ವ್ಯಕ್ತಪಡಿಸಲಾಯಿತು. ದೇವೇಗೌಡರ ಬೆನ್ನೆಲುಬಾಗಿದ್ದ ಚೆನ್ನಮ್ಮನವರು ದೈವ ಭಕ್ತರು ಹಾಗೂ ಆದರ್ಶ ಗೃಹಿಣಿಯಾಗಿದ್ದರು.
ಮನೆಗೆ ಭೇಟಿ ನೀಡುತ್ತಿದ್ದ ಕಾರ್ಯಕರ್ತರು, ಸ್ನೇಹಿತರು, ಸಿಬ್ಬಂದಿಗೆ ಚೆನ್ನಮ್ಮನವರು ಊಟ ಬಡಿಸಿದೆ ಕಳುಹಿಸುತ್ತಿರಲಿಲ್ಲ. ತಾಯಿ ಚೆನ್ನಮ್ಮರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.


