ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ಆಕ್ರೋಶ ಜಿಲ್ಲೆಯಲ್ಲಿ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರ ಬೆಳಗಾವಿಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸದೆ ಇರುವುದಕ್ಕೆ ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರದ ಈ ಧೋರಣೆ ರೈತ ವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಬಿತ್ತನೆ ಮಾಡಿದ ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಆದರೆ, ಅಧಿಕಾರಿಗಳು ಮಾತ್ರ ವಾಸ್ತವ ಸ್ಥಿತಿಯನ್ನು ಸರ್ಕಾರಕ್ಕೆ ಮುಚ್ಚಿಡುತ್ತಿದ್ದಾರೆ.ಬೇರೆ ಜಿಲ್ಲೆಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿರುವ ಸರ್ಕಾರ, ಬೆಳಗಾವಿ ಜಿಲ್ಲೆಯನ್ನು ಕೈಬಿಟ್ಟಿರುವುದು ಇಲ್ಲಿನ ರೈತರಿಗೆ ಮಾಡಿದ ದ್ರೋಹವಾಗಿದೆ. ಸರ್ಕಾರ ತಕ್ಷಣವೇ ಬೆಳಗಾವಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಪ್ರತಿ ಎಕರೆಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಮೇವಿನ ಬ್ಯಾಂಕ್ಗಳನ್ನು ತಕ್ಷಣ ಆರಂಭಿಸಬೇಕು. "ಸರ್ಕಾರ ಒಂದು ವಾರದೊಳಗೆ ಬೆಳಗಾವಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸದಿದ್ದರೆ, ಜಿಲ್ಲೆಯ ಸಮಸ್ತ ರೈತರನ್ನು ಒಗ್ಗೂಡಿಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು" ಎಂದು ಪ್ರವೀಣ ನಾಯಿಕ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಹೇಶ ಶರ್ಮಾ, ಶರಣಪ್ಪಾ ಶಿಂದೆ, ಅಮೂಲ ಚವಾಣ, ಅನೀಲ ಭಾಮನೆ, ಯಾಸಿನ್ ನದಾಪ, ಅಶೋಕ ಬಡಿಗೇರ, ರೋಹಿದಾಸ ಭಂಡಾರೆ ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ


