ಗುರುಮಠಕಲ್: ಮಳೆ ಕೊರತೆಯಿಂದ ಗುರುಮಠಕಲ್ ತಾಲ್ಲೂಕಿನ ಜನರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ಜನರ ನೆರವಿಗೆ ಧಾವಿಸಬೇಕು ಎಂದು ಜೆಡಿಎಸ್ ಯುವ ಮುಖಂಡ ಶಿವರೆಡ್ಡಿ ಮಲ್ಲಾಪುರ ಒತ್ತಾಯಿಸಿದ್ದಾರೆ.
ಮಳೆ ಕೊರತೆಯಿಂದ ರೈತರು ಕೃಷಿ ಚಟುವಟಿಕೆಗಳಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದು ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಭಾಗದ ಜನರೂ ಸಂಕಷ್ಟ ಎದುರಿಸುತ್ತಿದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರದಿಂದ ಸಮರ್ಪಕ ಬರ ಪರಿಹಾರ ಘೋಷಣೆಯಾಗದಿರುವುದು ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ
ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುವುದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿರುವ ಶಿವರೆಡ್ಡಿ ಮಲ್ಲಾಪುರ ಜನರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ರಾಜಕೀಯ ಕಾರ್ಯಕ್ರಮಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಎಂದು ಕಿಡಿಕಾಡಿದರು
ಜನಸೇವೆಯೇ ಜನಪ್ರತಿನಿಧಿಗಳ ಕರ್ತವ್ಯ
ಜನಸೇವೆಯೇ ಜನಪ್ರತಿನಿಧಿಗಳ ಪ್ರಮುಖ ಕರ್ತವ್ಯವಾಗಿದ್ದು ಪ್ರಸ್ತುತ ಜನರ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಮರೆತು ಸ್ವಾರ್ಥ ರಾಜಕಾರಣದಲ್ಲಿ ನಾಯಕರು ತೊಡಗಿದ್ದಾರೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ ಜನಪ್ರತಿನಿಧಿಗಳು ಕೂಡಲೇ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ಮೂಲಕ ಅಗತ್ಯ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ
ತಕ್ಷಣ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ರೈತರು ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ನೆರವು ಮತ್ತು ಪರಿಹಾರ ಒದಗಿಸಬೇಕು ಜನರ ಕಷ್ಟಗಳಿಗೆ ಸ್ಪಂದಿಸುವುದೇ ನಿಜವಾದ ಜನಸೇವೆ ಎಂದು ಶಿವರೆಡ್ಡಿ ಮಲ್ಲಾಪುರ ತಿಳಿಸಿದ್ದಾರೆ.
ವರದಿ : ರವಿ ಬುರನೋಳ್


