ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ ಭೀಕರ ಕೊಲೆಯೊಂದು ನಡೆದಿದ್ದು, ಆಸ್ತಿ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಹಾಗೂ ಮಗಳನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಮತ್ತು ಅವರ ಪುತ್ರಿ ಶಶಿಕಲಾ (26) ಕೊಲೆಯಾದ ದುರದೃಷ್ಟಕರ ಸೈನಿಕ ಕುಟುಂಬದ ಸದಸ್ಯರು.
ಘಟನೆಯಲ್ಲಿ ರುದ್ರಪ್ಪ ಅವರ ಕಾರು ಚಾಲಕನಿಗೂ ತೀವ್ರ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗಾಗಿ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ತಿಪಾಲು ಮಾಡಿಕೊಳ್ಳಲು ಅರ್ಜಿ ಸಲ್ಲಿಸುವ ಉದ್ದೇಶದಿಂದ ರುದ್ರಪ್ಪ ಅವರು ತಮ್ಮ ಮಗಳು ಹಾಗೂ ಚಾಲಕನೊಂದಿಗೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದರು.
ಈ ವಿಷಯ ತಿಳಿದ ರುದ್ರಪ್ಪ ಅವರ ಇಬ್ಬರು ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ರುದ್ರಪ್ಪ ಅವರ ಓರ್ವ ಪುತ್ರ ಸೇರಿಕೊಂಡು ಕಚೇರಿ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.
ಕೊಡಲಿ ಮತ್ತು ಕುಡುಗೋಲುಗಳಂತಹ ಮಾರಕಾಸ್ತ್ರಗಳಿಂದ ಸಜ್ಜಾಗಿ ಬಂದಿದ್ದ ಆರೋಪಿಗಳು ಕಚೇರಿಯ ಒಳಗಡೆಯೇ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.


