ತುರುವೇಕೆರೆ: ಕುಟುಂಬದ ಸರ್ವತೋಮುಖ ಬೆಳವಣಿಗೆಯ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಂಗಳೂರು ಪ್ರಾದೇಶಿಕ ಕಛೇರಿ ವ್ಯಾಪ್ತಿಯ ಜ್ಞಾನವಿಕಾಸ ಕಾರ್ಯಕ್ರಮದ ಯೋಜನಾಧಿಕಾರಿ ಸಂಗೀತ ತಿಳಿಸಿದರು.
ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತುರುವೇಕೆರೆ ಗ್ರಾಮಾಂತರ ಕಛೇರಿ, ಬೆಂಗಳೂರು ಮಹಾವೀರ ಆಸ್ಪತ್ರೆಯ ಸಹಯೋಗದಲ್ಲಿ ಕದಬಹಳ್ಳಿ ನೇತ್ರಾವತಿ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕುಟುಂಬದಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯ. ಕುಟುಂಬದ ಸದಸ್ಯರ ಒಳಿತಿಗೆ ತಮ್ಮ ಬದುಕನ್ನೇ ಮುಡಿಪಾಗಿಡುವ ಮಹಿಳೆಯರು ತಮ್ಮ ಆರೋಗ್ಯ, ಬದುಕಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿದ್ದ ಕಾಲ ದೂರವಾಗಿದೆ. ಇಂದು ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಅದ್ವಿತೀಯ ಸಾಧನೆ ಮಾಡಿದ್ದಾರೆ. ತೊಟ್ಟಿಲು ತೂಗುವ ಕೈ ದೇಶವನ್ನು ಮುನ್ನಡೆಸಬಲ್ಲದು ಎಂಬುದನ್ನು ಮಹಿಳೆಯರು ಸಾಧಿಸಿ ತೋರಿಸಿದ್ದಾರೆ ಎಂದರು.
ಕಳೆದ 34 ವರ್ಷದಿಂದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಜ್ಞಾನ ವಿಕಾಸ ಕಾರ್ಯಕ್ರಮವು ಮಹಿಳೆ ತನ್ನ ಬಗ್ಗೆ ತಾನು ಯೋಚಿಸುವ ಹಾಗೂ ಕುಟುಂಬದ ಅಭಿವೃದ್ಧಿಗೆ ಅಗತ್ಯವಾದ ಜ್ಞಾನ ಸಂಪಾದಿಸುವ ವೇದಿಕೆಯಾಗಿದೆ.
ರಾಜ್ಯದ ಹಳ್ಳಿಗಾಡಿನ ಮಹಿಳೆಯರಿಗೆ ಗೃಹಾಡಳಿತ, ಅತಿಥಿ ಸತ್ಕಾರ ಕೌಶಲ್ಯಗಳು, ಪೌಷ್ಠಿಕ ಆಹಾರ, ಸ್ವ ಉದ್ಯೋಗ, ಮಕ್ಕಳ ಶಿಕ್ಷಣ, ಆರೋಗ್ಯ ಸಮಸ್ಯೆಗಳ ಬಗ್ಗೆ ಮಹಿಳೆಯರಿಗೆ ಮಾಹಿತಿ ಮತ್ತು ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಯೋಜನೆಯ ನೂರಾರು ಮಹಿಳಾ ಸದಸ್ಯರು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಭಗವಾನ್ ಮಹಾವೀರ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್, ಯೋಜನಾಧಿಕಾರಿ ಶೇಖರ ಶೆಟ್ಟಿ, ಒಕ್ಕೂಟದ ಅಧ್ಯಕ್ಷೆ ಅನ್ನಪೂರ್ಣ, ಗ್ರಾಪಂ ಮಾಜಿ ಅಧ್ಯಕ್ಷ ಶೇಖರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಆಶಾರಾಣಿ, ಗ್ರಾಮದ ಮುಖಂಡ ಮಹೇಶ್, ಮೇಲ್ವಿಚಾರಕಿ ಮೇಘಮಾಲಾ, ಸೇವಾ ಪ್ರತಿನಿಧಿ ಗೀತಾ ಸೇರಿದಂತೆ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್


