ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ 6 ದಿನಗಳಿಂದ ಬಿಡುವು ನೀಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ (Heavy Rain Effect) ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belgaum) ಪ್ರವಾಹದ(flooding) ಭೀತಿ ಎದುರಾಗಿದೆ.
ಕರ್ನಾಟಕದ(Karnataka) ನದಿಗಳಿಗೆ ಒಟ್ಟು 98 ಸಾವಿರದಿಂದ 1 ಲಕ್ಷ ಕ್ಯೂಸೆಕ್ಗೂ ಹೆಚ್ಚು ನೀರಿನ ಒಳಹರಿವು ದಾಖಲಾಗಿದ್ದು, ಕೇವಲ ಒಂದೇ ರಾತ್ರಿಯಲ್ಲಿ ಕೃಷ್ಣಾ ನದಿಗೆ ಬರೋಬ್ಬರಿ 28 ಸಾವಿರ ಕ್ಯೂಸೆಕ್ ಹೆಚ್ಚುವರಿ ನೀರು ಹರಿದು ಬಂದಿದೆ.
ಇದರಿಂದಾಗಿ ಬೆಳಗಾವಿ ಜಿಲ್ಲೆಯ ಪ್ರಮುಖ ನದಿಗಳಾದ ಕೃಷ್ಣಾ, ದೂದಗಂಗಾ, ವೇದಗಂಗಾ, ಹಿರಣ್ಯಕೇಶಿ, ಘಟಪ್ರಭಾ, ಮಲಪ್ರಭಾ ಹಾಗೂ ಮಾರ್ಕಂಡೇಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.
ಭಾರೀ ಒಳಹರಿವಿನಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ 8 ಕೆಳಹಂತದ ಸೇತುವೆಗಳು ಜಲಾವೃತವಾಗಿವೆ.
ಮುಲ್ಲಾಂಕಿ-ದತ್ತವಾಡ, ಕಾರದಗಾ-ಬೋಜ್, ಅಕ್ಕೋಳ-ಸಿದ್ನಾಳ, ಜತ್ರಾಟ್-ಭೀವಶಿ, ಬಾರವಾಡ-ಕನ್ನೂರ ಹಾಗೂ ಬೋಜವಾಡಿ-ಗಜವರವಾಡಿ ಸಂಪರ್ಕ ಸೇತುವೆಗಳು ಸೇರಿದಂತೆ ಹಲವು ಸೇತುವೆಗಳು ನೀರಿನಲ್ಲಿ ಮುಳುಗಿವೆ. ಪರಿಣಾಮ 16ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಈ ಭಾಗದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕಿಲೋಮೀಟರ್ಗಟ್ಟಲೆ ಬಳಸಿ ಪರ್ಯಾಯ ಮಾರ್ಗಗಳ ಮೂಲಕ ಸಂಚಾರ ಮಾಡುತ್ತಿದ್ದಾರೆ.


