ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಬೆಂಕಿ ಆರುವ ಲಕ್ಷಣ ಕಾಣಿಸುತ್ತಿಲ್ಲ. ಇಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಆದರೆ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಗಮನಿಸಬೇಕಾದ ಮುಖ್ಯವಾದ ಅಂಶ ಎಂದರೆ ಅದು ಮಹಿಳಾ ಸಚಿವರೇ ಇಲ್ಲ ಎನ್ನುವುದು.
ಹಿಂದಿನ ಸಿದ್ದರಾಮಯ್ಯ ಸಂಪುಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಸಚಿವೆಯಾಗಿದ್ದರು. ಆದರೆ ಈ ಬಾರಿ ಅವರಿಗೂ ಸಚಿವ ಸ್ಥಾನ ಲಭಿಸಿಲ್ಲ. ಸರ್ಕಾರದ ಈ ನಿರ್ಧಾರ ಲಕ್ಷ್ಮಿ ಹೆಬ್ಬಾಳ್ಕರ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ಐತಿಹಾಸಿಕ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ನಾಯಕಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲೇಬೇಕು ಎಂದು ಪಟ್ಟು ಹಿಡಿದರು.
ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಕ್ಷವನ್ನು ಬಲಪಡಿಸಲು ನಿರಂತರವಾಗಿ ಶ್ರಮಿಸಿದ್ದಾರೆ ಮತ್ತು ಮಹಿಳಾ ಪ್ರತಿನಿಧಿಯಾಗಿ ದೊಡ್ಡ ಮಟ್ಟದ ಜನಬೆಂಬಲ ಹೊಂದಿದ್ದಾರೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಪ್ರತಿಪಾದಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಅವರಿಗೆ ಈ ಬಾರಿ ಮಂತ್ರಿ ಸ್ಥಾನ ಕೈತಪ್ಪಬಾರದು. ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಅವರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬೆಂಬಲಿಗರು ಎಚ್ಚರಿಸಿದ್ದಾರೆ.


