ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಟಿಎಂಸಿ ಪಕ್ಷ ಹೀನಾಯವಾಗಿ ಸೋಲನುಭವಿಸಿದ್ದರೂ, ಸೋಲನ್ನು ಒಪ್ಪಿಕೊಳ್ಳದ ಮಮತಾ ಬ್ಯಾನರ್ಜಿ, ಚುನಾವಣೆಯಲ್ಲಿ ನೈತಿಕವಾಗಿ ನಾವೇ ಗೆದ್ದಿದ್ದೇವೆ. ನಾನು ಯಾವ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿ ನಡೆಸಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳದಲ್ಲಿ ನಿಸ್ಪಕ್ಷಪಾತವಾಗಿ ಚುನಾವಣೆ ನಡೆದಿಲ್ಲ. ಬಿಜೆಪಿ ಹಾಗೂ ಚುನಾವಣಾ ಆಯೋಗ ಕುತಂತ್ರವಾಗಿ ಚುಅನವಣೆ ನಡೆಸಿದ್ದಾರೆ. ಚುನಾವಣಾ ಆಯೋಗ ಮಾರಾಟವಾಗಿದೆ. ವಾಮಮಾರ್ಗದ ಮೂಲಕ ಬಿಜೆಪಿ ಗೆಲುವು ಪಡೆದಿದೆ ಎಂದು ವಾಗ್ದಾಳಿ ನಡೆಸಿದರು.
ಟಿಎಂಸಿ ಸೋಲನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ನಡೆದಿದೆ. ನೂರು ಸ್ಥಾನಗಳಲ್ಲಿ ನಮ್ಮಿಂದ ಕಿತ್ತುಕೊಳ್ಳಲಾಗಿದೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ನನ್ನ ಬಳಿಯೂ ರಾಜಕೀಯ ಸ್ಟ್ರಾಟಜಿ ಇದೆ.
ಅದೇನೆಂಬುದನ್ನು ಈಗ ನಾನು ಬಹಿರಂಗಪಡಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ ಪಶ್ಚಿಮ ಬಂಗಾಳದಲ್ಲಿ ಸಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 293 ವಿಧಾನಸಭಾ ಕ್ಷೇತ್ರಗಳ ಪೈಕಿ ಟಿಎಂಸಿ 80 ಸ್ಥಾನಗಳಲ್ಲಿ ಗೆಲುವು ಪಡೆದಿದ್ದರೆ, ಬಿಜೆಪಿ 207 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ..

