ಮೈಸೂರು: 'ಕಾಂತಾರ' ಸಿನಿಮಾದ ಪಂಜುರ್ಲಿ ಹಾಗೂ ಚಾವುಂಡಿ ದೈವದ ಪಾತ್ರವನ್ನು ಹೆಣ್ಣು ದೆವ್ವ ಎಂದು ಕರೆದು, ಅಪಹಾಸ್ಯ ಮಾಡಿದ್ದ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ರಣವೀರ್ ಸಿಂಗ್, ಇದೀಗ ಮೈಸೂರಿನ ಸಾಂಸ್ಕೃತಿಕ ನಗರಿಗೆ ಭೇಟಿ ನೀಡಿದ್ದಾರೆ.
ಯಾರಿಗೂ ಮುನ್ಸೂಚನೆ ನೀಡದಂತೆ ರಹಸ್ಯವಾಗಿ ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ ಅವರು, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.ಅಲ್ಲದೆ, ತಮ್ಮಿಂದಾದ ತಪ್ಪಿಗೆ ತಾಯಿಯ ಸನ್ನಿಧಿಯಲ್ಲಿ ತಲೆಬಾಗಿ ಕ್ಷಮೆಯಾಚಿಸಿದ್ದಾರೆ.
ರಣವೀರ್ ಸಿಂಗ್ ಅವರು ದೇವಸ್ಥಾನದ ಗರ್ಭಗುಡಿಯ ಮುಂದೆ ಅತ್ಯಂತ ಭಕ್ತಿಭಾವದಿಂದ ಕುಳಿತು, ಕೈಮುಗಿದು ತಲೆಬಾಗಿ ಕ್ಷಮೆ ಕೇಳುತ್ತಿರುವ ಫೋಟೋಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ.
ಈ ಹಿಂದೆ ಈ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ, ರಣವೀರ್ ಸಿಂಗ್ ಅವರು ತಮ್ಮ ಅಧಿಕೃತ 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು.
ಅಷ್ಟೇ ಅಲ್ಲದೆ, ಶೀಘ್ರದಲ್ಲೇ ಕರ್ನಾಟಕದ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರಾಯಶ್ಚಿತ್ತ ಪೂಜೆ ಸಲ್ಲಿಸುವುದಾಗಿ ನ್ಯಾಯಾಲಯ ಹಾಗೂ ಸಾರ್ವಜನಿಕರಿಗೆ ಭರವಸೆ ನೀಡಿದ್ದರು. ಅದರಂತೆ ಈಗ ಅವರು ಮೈಸೂರಿಗೆ ಬಂದು ದೈವದ ಅಪಮಾನದ ಕಳಂಕ ಕಳೆದುಕೊಳ್ಳಲು ಯತ್ನಿಸಿದ್ದಾರೆ.

