ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಹಗರಣದ (KPSC Scam) ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ (Gyanendra Kumar) ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕೆಪಿಎಸ್ಸಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಈ ಕಠಿಣ ಕ್ರಮ ಕೈಗೊಂಡಿದೆ.
ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು ಪ್ರಸ್ತುತ ಎಂಎಸ್ಎಂಇ (MSME) ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಿಐಡಿ ತನಿಖೆ ಪೂರ್ಣಗೊಳ್ಳುವವರೆಗೂ ಅಮಾನತು ಆದೇಶ ಮುಂದುವರಿಯಲಿದ್ದು, ಸರ್ಕಾರದ ಲಿಖಿತ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು (Headquarters) ಬಿಟ್ಟು ತೆರಳುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ
ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಕೆಪಿಎಸ್ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿತ್ತು.
ಈ ಅಕ್ರಮಗಳ ನೇರ ಹೊಣೆ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರ ಮೇಲಿದೆ ಎಂದು ಇಡಿ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದ್ದರು.


