ಹಾವೇರಿ : ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ಅಗ್ನಿ ದುರಂತವೊಂದು ತಪ್ಪಿದ್ದು, ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಬಳಿ ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿಯ ‘ಪಲ್ಲಕ್ಕಿ’ ಸ್ಲೀಪರ್ ಬಸ್ಗೆ (KA-57-F6680) ಆಕಸ್ಮಿಕವಾಗಿ ಬೆಂಕಿ ತಗುಲಿದೆ.ಬಸ್ಸಿನಲ್ಲಿ ಸುಮಾರು 17 ಪ್ರಯಾಣಿಕರಿದ್ದರು.
ಬಸ್ಸಿಗೆ ಬೆಂಕಿ ಹತ್ತಿಕೊಂಡಿದ್ದನ್ನು ತಕ್ಷಣವೇ ಗಮನಿಸಿದ ಚಾಲಕ ಪಕ್ಕೀರಪ್ಪ, ಕೂಡಲೇ ಬಸ್ಸನ್ನು ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದ್ದು, ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿನ ಬ್ರೇಕ್ ಲೈನ್ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

