ಬೆಂಗಳೂರು: ತಾಯಿ ಭುವನೇಶ್ವರಿ ಪ್ರತಿಮೆ ಮುಂದೆ ಭಾರತೀಯ ಜನತಾ ಪಕ್ಷದ(BJP) ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸಿಎಂಗೆ ಧೈರ್ಯವಿದ್ದರೆ ಆರೆಸೆಸ್ ನಿಷೇಧಿಸಲಿ ಎಂದು ಸವಾಲು ಹಾಕರುವ ಅವರು, ಪ್ರಿಯಾಂಕ್ ಖರ್ಗೆ ಆರೆಸೆಸ್ ಖಾತೆ ಪಡೆಯಲಿ ಎಂದು ಲೇವಡಿ ಮಾಡಿದರು.
ರಾಜ್ಯ ಮತ್ತು ದೇಶದ ಜನಸಂಖ್ಯೆಯಲ್ಲಿ ಮಹಿಳೆಯರು ಶೇಕಡ 50ರಷ್ಟು ಇದ್ದಾರೆ. ಮಹಿಳೆಯರಿಗೆ ಸಮಾನ ಅವಕಾಶ ಹಾಗೂ ಸೂಕ್ತ ಪ್ರಾತಿನಿಧ್ಯ ದೊರೆಯಬೇಕು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಮಹಿಳೆಯರಿಗೆ 33ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಾಗ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಅವರು ಅದನ್ನು ವಿರೋಧಿಸುತ್ತಾರೆ.
ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಮಹಿಳೆಯರಿಗೆ ಪ್ರಾತಿನಿಧ್ಯ ನಿರಾಕರಿಸುವ ಮೂಲಕ ಮಹಿಳಾ ಸಮುದಾಯಕ್ಕೆ ಅಪಮಾನ ಮಾಡುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು.
ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಒಬ್ಬ ಮಹಿಳೆಯ ಹೆಸರೂ ಸಚಿವರಾಗಿ ಸೇರ್ಪಡೆಯಾಗಲಿದೆ ಎಂಬ ವಿಚಾರ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿಯಾಗಿತ್ತು.
ಆದರೆ ಅಂತಿಮವಾಗಿ ಆ ಹೆಸರನ್ನು ಕೈಬಿಡಲಾಗಿದೆ. ಮಹಿಳೆಯರನ್ನು ಸಚಿವ ಸಂಪುಟದಿಂದ ದೂರವಿಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಅಪಮಾನ ಮಾಡಿದೆ ಎಂದು ಅವರು ಟೀಕಿಸಿದರು.
ಅಣ್ಣ ಬಸವಣ್ಣನವರ ನಾಡು ಹಾಗೂ ತಾಯಿ ಅಕ್ಕಮಹಾದೇವಿ ಜನಿಸಿದ ಪುಣ್ಯಭೂಮಿ ಕರ್ನಾಟಕ. ಇಂತಹ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಬೇಕಿತ್ತು. ಆದರೆ ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರಿಲ್ಲದ ಸಂದರ್ಭದಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ ಎಂಬುದು ಅತ್ಯಂತ ವಿಷಾದನೀಯ ಎಂದರು.


