ಮಂಡ್ಯ : ಗ್ರಾಮ ಪಂಚಾಯಿತಿಯ ಹಣಕಾಸು ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆ ಹಾಗೂ ಹಣ ದುರ್ಬಳಕೆ (Crime) ಆರೋಪದ ಹಿನ್ನೆಲೆಯಲ್ಲಿ ಮದ್ದೂರು ತಾಲೂಕಿನ ಆತಗೂರು ಗ್ರಾಮ ಪಂಚಾಯಿತಿ (Gram Panchayat) ಅಭಿವೃದ್ಧಿ ಅಧಿಕಾರಿ ಶಶಿಧರ್ ಅವರನ್ನು ಅಮಾನತುಗೊಳಿಸಲಾಗಿದೆ.
(Suspension) 15ನೇ ಹಣಕಾಸು ಆಯೋಗದ ಅನುದಾನದ ಬಳಕೆಯಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪವೂ ಕೇಳಿಬರುತ್ತಿದೆ.
ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಈ ಕುರಿತು ಅಮಾನತು ಆದೇಶ ಹೊರಡಿಸಿದ್ದಾರೆ.
ಪಿಡಿಒ ವಿರುದ್ಧ ಬಂದಿರುವ ದೂರುಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಗ್ರಾಮ ಪಂಚಾಯಿತಿಗೆ ಬಿಡುಗಡೆಯಾಗುವ ಅನುದಾನವನ್ನು ನಿಯಮಾನುಸಾರ ಖರ್ಚು ಮಾಡುವುದು ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಮರ್ಪಕವಾಗಿ ಸಂರಕ್ಷಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.
ಆದರೆ ಆತಗೂರು ಗ್ರಾಮ ಪಂಚಾಯಿತಿಯಲ್ಲಿ ಈ ಪ್ರಕ್ರಿಯೆಯಲ್ಲಿ ಹಲವು ಲೋಪಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ.
ಸುಮಾರು ₹13.10 ಲಕ್ಷ ಮೊತ್ತಕ್ಕೆ ಸಂಬಂಧಿಸಿದ ದಾಖಲೆಗಳು ಸರಿಯಾಗಿ ನಿರ್ವಹಣೆಯಾಗಿಲ್ಲ ಎನ್ನಲಾಗಿದೆ. ಈ ಹಣಕ್ಕೆ ಸಂಬಂಧಿಸಿದ 11ರಿಂದ 12 ಪ್ರಮುಖ ಕಡತಗಳು ಲಭ್ಯವಿಲ್ಲ ಎಂಬುದು ಪರಿಶೀಲನೆ ವೇಳೆ ಗಮನಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಇದರ ಜತೆಗೆ ಸುಮಾರು ₹27 ಲಕ್ಷ ಮೊತ್ತದ ಹಣದ ಬಳಕೆಯಲ್ಲಿಯೂ ಅಕ್ರಮ ನಡೆದಿದೆ ಎಂಬ ಆರೋಪ ಪ್ರತ್ಯೇಕವಾಗಿ ಕೇಳಿಬಂದಿದೆ.
ಅನುದಾನದ ಹಣ ಹೇಗೆ ಖರ್ಚಾಗಿದೆ, ಅದಕ್ಕೆ ಅಗತ್ಯ ದಾಖಲೆಗಳಿವೆಯೇ ಹಾಗೂ ಹಣಕಾಸು ವ್ಯವಹಾರಗಳು ನಿಯಮಾನುಸಾರ ನಡೆದಿವೆಯೇ ಎಂಬ ಪ್ರಶ್ನೆಗಳು ಇದೀಗ ತನಿಖೆಯ ಕೇಂದ್ರಬಿಂದುವಾಗಿವೆ.
ಶಶಿಧರ್ ಅವರ ವಿರುದ್ಧ ಒಟ್ಟಾರೆ ₹1.5 ಕೋಟಿಗೂ ಅಧಿಕ ಮೊತ್ತದ ಹಣ ದುರ್ಬಳಕೆ ಆರೋಪವಿದ್ದು, ಈ ಆರೋಪಗಳ ಹಿನ್ನೆಲೆಯಲ್ಲಿ ಇಲಾಖಾ ಮಟ್ಟದಲ್ಲಿ ಕ್ರಮ ಮುಂದುವರಿಯುವ ಸಾಧ್ಯತೆಯಿದೆ.


