ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ಶಿಕ್ಷಣ ಇಲಾಖೆಯು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದರಲ್ಲಿ ವಿದ್ಯಾರ್ಥಿಗಳ ಹಿತರಕ್ಷಣೆಗೆ ಹಲವು ಕಠಿಣ ಹಾಗೂ ಪ್ರಮುಖ ನಿಯಮಗಳನ್ನು ಜಾರಿಗೆ ತರಲಾಗಿದೆ.
ಆರ್ಥಿಕ ಕಷ್ಟ ಅಥವಾ ಹಣಕಾಸಿನ ಕಾರಣಕ್ಕೆ ಯಾವುದೇ ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ವಂಚಿತಗೊಳಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ಸೂಚಿಸಿದೆ.
ಅಲ್ಲದೆ, ಹಾಸ್ಟೆಲ್ ಸೌಲಭ್ಯ ನಿರಾಕರಿಸುವುದು, ಅಂಕಪಟ್ಟಿ (Marks Card) ಅಥವಾ ಪದವಿ ಪ್ರಮಾಣಪತ್ರಗಳನ್ನು (Degree Certificate) ತಡೆಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಅಸಹಜ ಸಾವಿಗೆ ಪೊಲೀಸ್ ದೂರು ಕಡ್ಡಾಯ
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಸಹಜವಾಗಿ ಸಾವನ್ನಪ್ಪಿದರೆ ಅಥವಾ ಆತ್ಮಹತ್ಯೆಗೆ ಶರಣಾದರೆ, ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ದೂರು ದಾಖಲಿಸುವುದನ್ನು ಕಾಲೇಜು ಆಡಳಿತ ಮಂಡಳಿಗೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವು ದೂರಶಿಕ್ಷಣ ಹಾಗೂ ಆನ್ಲೈನ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಅನ್ವಯಿಸಲಿದೆ.


