ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ , ಅಲ್ಲಲ್ಲಿ ರಸ್ತೆ ಮಾರ್ಗ ಬದಲಾವಣೆಗಳ ನಡುವೆ ರೋಗಿಗಳನ್ನು, ಗರ್ಭಿಣಿಯರನ್ನು ಆಸ್ಪತ್ರೆಗಳಿಗೆ ಕರೆದೊಯ್ಯಬೇಕೆಂದರೆ ಹರಸಾಹಸ ಪಡಬೇಕಾದ ಸ್ಥಿತಿ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರಿಗಾಗಿ ರಸ್ತೆ ಬಂದ್ ಮಾಡಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಕ್ಕೆ ಸಂಚಾರ ದಟ್ಟಣೆ ನಡುವೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿಯೊಬ್ಬ ಸಿಡಿದೆದ್ದು ಮಾರ್ಗ ಮಧ್ಯೆದಲ್ಲಿ ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಲಾರಂಭಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಹೆಚ್ ಎ ಎಲ್ ಹಳೇ ಏರ್ ಪೋರ್ಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಾಜ್ಯಪಾಲರು ತೆರಳಲೆಂದು ರಸ್ತೆ ಬಂದ್ ಮಾಡಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದೀರಿ ಇದರಿಂದಾಗಿ ಸುತ್ತಮುತ್ತ ಟ್ರಾಫಿಕ್ ಜಾಮ್ ನಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ನನ್ನ ಪತ್ನಿ ಗರ್ಭಿಣಿ ಆಸ್ಪತ್ರೆಗೆ ಹೋಗಬೇಕು.
ಮಾರ್ಗ ಮಧ್ಯೆ ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿದ್ದೀವಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ತೆರಳುವ ಝೀರೋ ಟ್ರಾಫಿಕ್ ಮಾರ್ಗ ಮಧ್ಯೆ ಏಕಾಂಗಿಯಾಗಿ ಕುಳಿತು ಧರಣಿ ನಡೆಸಿದ್ದಾನೆ.
ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವ್ಯಕ್ತಿಯನ್ನು ಮನವೊಲಿಸಿ ಸ್ಥಳದಿಂದ ಏಳುವಂತೆ ಸೂಚಿಸಿದ್ದಾರೆ. ಆದಾಗ್ಯೂ ಒಪ್ಪದೇ ಅಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದಾನೆ. ಕೆಲ ಸಮಯದ ಬಳಿಕ ಪೊಲಿಸರು ಆತನನ್ನು ಸ್ಥಳದಿಂದ ಕಳುಹಿಸಿದ್ದಾರೆ.


