ಭಾಲ್ಕಿ: ತಾಲೂಕಿನ ವರವಟ್ಟಿ (ಬಿ) ಗ್ರಾಮದ ರೈತ ಬೋಲಾನಂದ ಸ್ವಾಮಿ ಚಿಕಲೆ (40) ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಸಂತಾಪ ವ್ಯಕ್ತಪಡಿಸಿದರು.
ಮೃತ ರೈತ ಬೋಲಾನಂದ ಸ್ವಾಮಿ ಚಿಕಲೆ ಅವರ ನಿವಾಸಕ್ಕೆ ಭೇಟಿ ನೀಡಿದ ಪ್ರಕಾಶ್ ಖಂಡ್ರೆ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಧನಸಹಾಯ ನೀಡಿ ಕುಟುಂಬದೊಂದಿಗೆ ತಾವು ಇರುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಸ್ಪಂದಿಸಬೇಕು. ಮೃತ ರೈತನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರಧನ ಒದಗಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ರೈತರು ಸಾಲ, ಬೆಳೆ ನಷ್ಟ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ರೈತರ ₹5 ಲಕ್ಷದವರೆಗಿನ ಸಾಲ ಮನ್ನಾ ಮಾಡಬೇಕು ಹಾಗೂ ಪ್ರತಿ ಎಕರೆಗೆ ₹50 ಸಾವಿರ ಪರಿಹಾರಧನ ನೀಡಬೇಕು ಎಂದು ಆಗ್ರಹಿಸಿದರು.
ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕಠಿಣ ನಿರ್ಧಾರಕ್ಕೆ ಮುಂದಾಗಬಾರದು. ಸಂಕಷ್ಟದ ಸಂದರ್ಭದಲ್ಲಿ ಧೈರ್ಯ ಕಳೆದುಕೊಳ್ಳದೆ, ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು. ರೈತರ ನೆರವಿಗೆ ಸರ್ಕಾರ ಹಾಗೂ ಸಮಾಜ ಸದಾ ನಿಲ್ಲಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ವೆಂಕಟರಾವ್ ಬಿರಾದಾರ, ಗುರಯ್ಯಾ ಸ್ವಾಮಿ, ರಾಜಶೇಖರ್ ಬಿರಾದಾರ, ಹವಗಿರಾವ್ ಬಚ್ಚಣ್ಣ, ಶಂಕರ್ ರಾವ್ ಬಿರಾದರ್, ಪಂಡಿತ್ ಬಿರಾದರ್ ಸೇರಿದಂತೆ ಗ್ರಾಮಸ್ಥರು ಹಾಗೂ ಹಿರಿಯರು ಉಪಸ್ಥಿತರಿದ್ದರು.
ವರದಿ : ಸಂತೋಷ ಬಿಜಿ ಪಾಟೀಲ


