ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದೆ. ಧಾರವಾಡ, ರಾಯಚೂರು, ಉತ್ತರ ಕನ್ನಡ ಸೇರಿ 10 ಜಿಲ್ಲೆಗಳಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದ್ದು, ಸಿಡಿಲಬ್ಬರದ ಮಳೆಗೆ ಮೂವರು ಬಲಿಯಾಗಿದ್ದಾರೆ.
ಧಾರವಾಡ ತಾಲೂಕಿನ ಕವಲಗೇರಿಯಲ್ಲಿ ಸಿಡಿಲು ಬಡಿದು ಜಯಶ್ರೀ ಹನುಮಂತಪ್ಪ ಶಿರಸಂಗಿ (36) ಎಂಬುವರು ಮೃತಪಟ್ಟಿದ್ದಾರೆ.
ಹೊಲದಲ್ಲಿ ಹಾಕಿದ್ದ ಮೆಂತೆ ಸಸಿಗಳನ್ನು ಕೀಳುತ್ತಿದ್ದಾಗ ದಂಪತಿಗೆ ಸಿಡಿಲು ಬಡಿಯಿತು. ಪತ್ನಿ ಜಯಶ್ರೀ ಸ್ಥಳದಲ್ಲೇ ಮೃತಪಟ್ಟರೆ, ಆಕೆಯ ಪತಿ ಹನುಮಂತಪ್ಪ ಗಾಯಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಅಪ್ಸರಕೊಂಡದ ಕಡಲತೀರದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಮೀನುಗಾರಿಕೆಗೆ ತೆರಳಿದ್ದ ಅಪ್ಸರಕೊಂಡದ ವಿನಾಯಕ ಖಾರ್ವಿ (35) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದೇ ವೇಳೆ ಹಲವು ಪ್ರವಾಸಿಗರು ಸಿಡಿಲಿನ ಆಘಾತಕ್ಕೆ ಒಳಗಾಗಿದ್ದು, ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ಗೆ ಗೊಬ್ಬರ ತುಂಬುತ್ತಿದ್ದ ವೇಳೆ ಸಿಡಿಲು ಬಡಿದು ಕರಿಯಪ್ಪ ಗೆನ್ನಾಕಿಹಾಳ್ (45) ಎಂಬುವರು ಮೃತಪಟ್ಟಿದ್ದಾರೆ.

