ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇದೇ ವೇಳೆ ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಹಾಗೂ ಜಾರಕಿಹೊಳಿ ಆಪ್ತರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಬಕಾರಿ ಪರವಾನಗಿ ಹಗರಣಕ್ಕೆ ಸಂಬಂಧಿಸಿದಂತೆ ಹಾಗೂ ವಿದೇಶಿ ಅಕ್ರಮ ಹಣ, ಹವಾಲಾ ಜಾಲದ ನಂಟು ಅನುಮಾನದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಇಂದು ಮುಂಜಾನೆಯೇ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅತ್ತ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿರುವ ಮನೆ, ಕಚೇರಿ ಮಗಳು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಚೇರಿ, ಮಗ ರಾಹುಲ್ ಜಾರಕಿಹೊಳಿಗೆ ಸೇರಿದ ಜಾಗಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಬಾಮೈದ ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಮನೆ ಮೇಲೆ ಎರಡನೇ ಬಾರಿ ಇಡಿ ದಾಳಿ ನಡೆದಿದೆ. ಕಳೆದ ಜೂನ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಮಂಜುನಾಥ್ ಅವರ ಮನೆ, ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಪ್ರದೇಶಗಳಲ್ಲಿ ಇಡಿ ಸುದೀರ್ಘ ದಾಳಿ ನಡೆಸಿತ್ತು.


