ಚಿಕ್ಕೋಡಿ: ಕಳೆದ ಎರಡು ತಿಂಗಳಿನಿಂದ ನೀರಿಲ್ಲದೆ ಸಂಪೂರ್ಣವಾಗಿ ಒಣಗಿದ್ದ ಕೃಷ್ಣಾ ನದಿಗೆ ಇದೀಗ ಮತ್ತೆ ಜೀವ ಬಂದಿದೆ.
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ವರುಣನ ಅಬ್ಬರ ಜೋರಾಗಿರುವ ಹಿನ್ನೆಲೆಯಲ್ಲಿ ನದಿಗೆ ಬರೋಬ್ಬರಿ 15 ಸಾವಿರ ಕ್ಯೂಸೆಕ್ ಒಳಹರಿವು ಆರಂಭವಾಗಿದ್ದು, ನದಿ ಪಾತ್ರದ ರೈತರು ಹಾಗೂ ಸಾರ್ವಜನಿಕರಲ್ಲಿ ಹರ್ಷ ಮೂಡಿಸಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಕೃಷ್ಣಾ ನದಿಯಲ್ಲಿ ಜಲಕ್ಷಾಮ ಎದುರಾಗಿದ್ದರಿಂದ ಇತ್ತೀಚಿನ ದಿನಗಳಲ್ಲಿ ಕೃಷಿ ವಲಯಕ್ಕೆ ತೀವ್ರ ಹಿನ್ನಡೆಯಾಗಿತ್ತು.
ಕುಡಿಯುವ ನೀರಿಗೂ ಆಹಾಕಾರ ಸೃಷ್ಟಿಯಾಗುವ ಭೀತಿ ಎದುರಾಗಿತ್ತು. ಆದರೆ, ಇದೀಗ ನದಿಗೆ ಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಗ್ರಾಮದ ಬಳಿ ನದಿಯ ನೀರಿನ ರಭಸ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಮುಂದಿನ ದಿನಗಳಲ್ಲಿ ಒಳಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.


