ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮದ್ಯಪಾನ ಮಾಡಿಸಿ, ರಾತ್ರಿಯಿಡೀ ಆಕೆಯ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ದೇವರ ದರ್ಶನಕ್ಕೆಂದು ಕರೆದುಕೊಂಡು ಹೋಗಿ ಈ ಭೀಕರ ಕೃತ್ಯ ಎಸಗಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಇಬ್ಬರು ಪುರುಷರು ಹಾಗೂ ಇದಕ್ಕೆ ಸಹಕರಿಸಿದ ಒಬ್ಬ ಮಹಿಳೆ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜುಲೈ 17ರ ರಾತ್ರಿ ಮಹಿಳೆಯೊಬ್ಬಳು ದೇವಸ್ಥಾನಕ್ಕೆ ಹೋಗೋಣ ಎಂದು ಬಾಲಕಿಯನ್ನು ನಂಬಿಸಿ ಕರೆದುಕೊಂಡು ಬಂದಿದ್ದಳು. ಆ ಬಳಿಕ ಆಟೋದಲ್ಲಿ ಬಂದ ಇಬ್ಬರು ಆರೋಪಿಗಳು ಅಪ್ರಾಪ್ತೆಯನ್ನು ಬೇರೆಡೆಗೆ ಕರೆದೊಯ್ದಿದ್ದಾರೆ.
ಅಲ್ಲಿ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ, ತೀವ್ರವಾಗಿ ಹಲ್ಲೆ ನಡೆಸಿದ ಆರೋಪಿಗಳು, ಬಳಿಕ ನಿರ್ಮಾಣ ಹಂತದ ಕಟ್ಟಡವೊಂದಕ್ಕೆ ಆಕೆಯನ್ನು ಕರೆದೊಯ್ದು ರಾತ್ರಿ ಪೂರ್ತಿ ಅತ್ಯಾಚಾರ ಎಸಗಿದ್ದಾರೆ. ಬೆಳಗಾಗುತ್ತಿದ್ದಂತೆ ಬಾಲಕಿಯನ್ನು ಮನೆ ಬಳಿ ಬಿಟ್ಟು, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.


