ಅಥಣಿ : ಉತ್ತರ ಕರ್ನಾಟಕದ ಪ್ರಭಾವಿ ಹಿರಿಯ ರಾಜಕಾರಣಿ, ದಲಿತ ಸಮುದಾಯದ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ರಾಜ್ಯ ಮಾಧ್ಯಮ ವಕ್ತಾರ ರಾವಸಾಬ ಐಹೊಳೆ ಹಾಗೂ ತಾಲೂಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಮುಖಂಡರು ಸಿಎಂ ಡಿ. ಕೆ ಶಿವಕುಮಾರ ಹಾಗೂ ಪಕ್ಷದ ವರಿಷ್ಠರಿಗೆ ಒತ್ತಾಯ ಮಾಡಿದ್ದಾರೆ.
ಅವರು ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಆರ್ ಬಿ ತಿಮ್ಮಾಪುರ ಅವರು ಉತ್ತರ ಕರ್ನಾಟಕದ ಹಿರಿಯ ಶಾಸಕರಾಗಿ ಅನೇಕ ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದಲ್ಲದೆ ಇತ್ತೀಚಿಗೆ ಬಾಗಲಕೋಟೆಯ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಿಮ್ಮಾಪುರ ಅವರು ತಮ್ಮ ರಾಜಕೀಯ ಬದುಕಿನುದ್ದಕ್ಕೂ ಕಾಂಗ್ರೆಸ್ನ ತತ್ವ ಸಿದ್ದಾಂತಗಳನ್ನು ಅನುಸರಿಸಿಕೊಂಡು ಬಂದಿದ್ದಾರೆ. ಪಕ್ಷ ಸಂಘಟನೆಗೆ ನಿರಂತರ ಶ್ರಮಿಸಿದ್ದಾರೆ. ಪಕ್ಷ ಇವರ ಶ್ರಮವನ್ನು ಪರಿಗಣಿಸಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಖಾತೆಯ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ನಿರ್ದೇಶಕಿ ಹಾಗೂ ಎಐಸಿಸಿ ಸಂಯೋಜಕಿ ಸುನಿತಾ ಐಹೊಳೆ ಮಾತನಾಡಿ ಉತ್ತರ ಕರ್ನಾಟಕದ ದಲಿತ ಸಮುದಾಯದ ಹಿರಿಯ ನಾಯಕರಾಗಿರುವ ಆರ್ ಬಿ ತಿಮ್ಮಾಪುರ ನಾಲ್ಕೈದು ಬಾರಿ ಸಚಿವರಾಗಿ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಕೊಡುಗೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ರಾಜ್ಯ ಮತ್ತು ಕೇಂದ್ರ ವರಿಷ್ಠರು ಆರ್ ಬಿ ತಿಮ್ಮಪೂರ್ ಅವರಿಗೆ ಮಂತ್ರಿ ಸ್ಥಾನವನ್ನು ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಥಣಿ ತಾಲೂಕ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಹನುಮಂತ ಅರ್ದಾಯೂರ, ಸಮಾಜದ ಮುಖಂಡರಾದ ಕುಮಾರ ಗಸ್ತಿ, ಸಂತೋಷ್ ಹಾದಿಮನಿ, ಸದಾಶಿವ ದೊಡ್ಡಮನಿ, ಸುದೀಪ್ ಐಹೊಳೆ, ಸತೀಶ್ ಕುಲ್ಲೊಳ್ಳಿ, ಪ್ರಶಾಂತ್ ಆಚಾರಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

