ಭಾಲ್ಕಿ: ತಾಲ್ಲೂಕಿನ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಬೋಧಿಸುವ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷಾ ಕಲಿಕೆಗೆ ಹಿನ್ನಡೆಯಾಗುತ್ತಿರುವುದು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆಯಲ್ಲಿ ಪ್ರಥಮ ಆದ್ಯತೆ ನೀಡಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗಭೂಷಣ ಮಾಮಡಿ ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ಶಿಕ್ಷಕರ ಕೊರತೆಯಿಂದ ಪಾಲಕರು ಕನ್ನಡ ಮಾಧ್ಯಮದಲ್ಲಿ ಮಕ್ಕಳನ್ನು ದಾಖಲಿಸಲು ಹಿಂದೇಟು ಹಾಕುತ್ತಿದ್ದು, ಕನ್ನಡ ಭಾಷೆಯ ಬೆಳವಣಿಗೆಗೆ ಧಕ್ಕೆಯಾಗುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಅಲ್ಲದೆ, ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರ ಸಹಯೋಗದೊಂದಿಗೆ ಪೋಷಕರಲ್ಲಿ ಕನ್ನಡ ಮಾಧ್ಯಮ ಶಿಕ್ಷಣದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಜಿ. ಹಳ್ಳದ ಮಾತನಾಡಿ, ಗಡಿ ಭಾಗದ ಕನ್ನಡ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ತಾಲ್ಲೂಕಿನಲ್ಲಿ ಸುಮಾರು ೨೧೦ ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ ೧೦೩ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಬಂದಿದೆ. ಕನ್ನಡ ಭಾಷೆ ಮತ್ತು ಕನ್ನಡ ಮಾಧ್ಯಮ ಶಿಕ್ಷಣದ ಬಲವರ್ಧನೆಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಘಟಗಕದ ಆಧ್ಯಕ್ಷ ಸಂತೋಷ ಬಿಜಿ ಪಾಟೀಲ, ಕಾರ್ಯದರ್ಶಿ ಭದ್ರೇಶ ಸ್ವಾಮಿ, ಕನ್ನಡಾಭಿಮಾನಿಗಳಾದ ದಿಲೀಪ ಶೇರಿಕಾರ, ಸಿದ್ರಾಮಪ್ಪ ಕುಡತೆ, ರಮೇಶ ಕನ್ನಾಡೆ, ಶಿಕ್ಷಣ ಸಂಯೋಜಕರಾದ ಮಲ್ಲಿಕಾರ್ಜುನ ಕನ್ನಾಳೆ, ಕ.ರಾ.ಪ್ರಾ.ಶಾ.ಶಿ. ಸಂಘದ ನೂತನ ಅಧ್ಯಕ್ಷ ಬಸವರಾಜ ದಾನಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಸಂತೋಷ ಬಿಜಿ ಪಾಟೀಲ


