ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಹಾಗೂ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿದೆ.
ಆರಂಭದಲ್ಲಿ ಆಗಸ್ಟ್ 14 ರಂದು ನಡೆಯಲಿದ್ದ ಸದನದಲ್ಲಿಯೇ ಎಲ್ಲ ಸದಸ್ಯರಿಗೆ ಧನ್ಯವಾದ ಸಲ್ಲಿಸಿ ಅಧಿಕೃತವಾಗಿ ರಾಜೀನಾಮೆ ಸಲ್ಲಿಕೆ ಮಾಡಲು ಹೊರಟ್ಟಿ ಅವರು ನಿರ್ಧರಿಸಿದ್ದರು.
ಆದರೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ನಿರೀಕ್ಷೆಗಿಂತ ಮುಂಚಿತವಾಗಿಯೇ ರಾಜೀನಾಮೆ ನೀಡಿದ್ದು, ಸರ್ಕಾರದ ವಿರುದ್ಧ ಹರಿಹಾಯಲು ಪ್ರತಿಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.
ಈ ರಾಜಕೀಯ ಬೆಳವಣಿಗೆಯ ಬೆನ್ನಲ್ಲೇ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸುದೀರ್ಘ ಪತ್ರವೊಂದನ್ನು ಬರೆದಿದ್ದು, ತಮ್ಮ ರಾಜೀನಾಮೆಗೆ ಹಿನ್ನೆಲೆಯಾದ ಘಟನೆಗಳನ್ನು ಬಹಿರಂಗಪಡಿಸಿದ್ದಾರೆ.
ಸರ್ಕಾರದ ಕಡೆಯಿಂದ ತಮ್ಮ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆಯಲಾಗಿದೆ ಎಂಬ ಪ್ರತಿಪಕ್ಷ ಬಿಜೆಪಿಯ ಆರೋಪಗಳಿಗೆ ಈ ಪತ್ರ ಮತ್ತಷ್ಟು ಪುಷ್ಟಿ ನೀಡಿದೆ.
ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಯಾವ ಪರಿಸ್ಥಿತಿಯಲ್ಲಿ ತಾವು ಈ ನಿರ್ಧಾರಕ್ಕೆ ಬರಬೇಕಾಯಿತು ಎಂಬುದನ್ನು ಅವರು ಪತ್ರದಲ್ಲಿ ವಿವರವಾಗಿ ಉಲ್ಲೇಖಿಸಿದ್ದಾರೆ.
ಪತ್ರದ ಸಾರಾಂಶದ ಪ್ರಕಾರ, ನೂತನ ಎಂಎಲ್ಸಿಗಳ ಪ್ರಮಾಣವಚನ ಕಾರ್ಯಕ್ರಮ ಮುಗಿದ ತಕ್ಷಣವೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಹಲವು ಎಂಎಲ್ಸಿಗಳು ತಮ್ಮ ಕೊಠಡಿಗೆ ಆಗಮಿಸಿದ್ದರು.
ಆಗಸ್ಟ್ 14ರ ವರೆಗೆ ಕಾಯದೆ, "ಇಂದೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ" ಎಂದು ಅವರು ಸೂಚಿಸಿದರು. ಈ ಅನಿರೀಕ್ಷಿತ ಬೆಳವಣಿಗೆಯಿಂದ ತಮಗೆ ತೀವ್ರ ಆಶ್ಚರ್ಯವಾಯಿತು ಎಂದು ಹೊರಟ್ಟಿ ತಿಳಿಸಿದ್ದಾರೆ.
ಆ ಘಳಿಗೆಯಲ್ಲಿ ಎದುರಾದ ಮುಜುಗರದ ವಾತಾವರಣ ಹಾಗೂ ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ಸಿಎಂ ಮನವಿಗೆ ಒಪ್ಪಿ ತಾವು ತಕ್ಷಣವೇ ರಾಜೀನಾಮೆ ಸಲ್ಲಿಸಬೇಕಾಯಿತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.


