ಮೈಸೂರು : ಮೈಸೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮ ನಡೆದ ಸ್ಥಳವನ್ನು ಶ್ರೀರಾಮ ಸೇನೆ ಹಾಗೂ ಆರ್ಎಸ್ಎಸ್ ಬೆಂಬಲಿತ ಕಾರ್ಯಕರ್ತರು ಹೋಮ-ಹವನ ಮಾಡುವ ಮೂಲಕ 'ಶುದ್ಧೀಕರಣ'ಗೊಳಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರಿನ ಬಾಬು ಜಗಜೀವನ್ ರಾಮ್ ಪ್ರತಿಮೆ ಮುಂದೆ ನಡೆದ ಈ ಧರಣಿ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡಿದರು.
ಭಾಷಣದ ವೇಳೆ ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಯತೀಂದ್ರ ಸಿದ್ದರಾಮಯ್ಯ, 'ಆರ್ಎಸ್ಎಸ್ ಎಂಬುದು ಒಂದು ಸಾವಿರ ತಲೆಗಳಿರುವ ವಿಷಸರ್ಪದಂತೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
.ಈ ರೀತಿಯ ಮನಸ್ಥಿತಿಗಳು ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪೃಶ್ಯತೆಯನ್ನು ಜೀವಂತವಾಗಿಡಲು ಯತ್ನಿಸುತ್ತಿವೆ. ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ಸಂವಿಧಾನಕ್ಕೆ ಮಾಡಿದ ಈ ಅಪಮಾನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


