ಬೆಂಗಳೂರು : ಹಳಿಯಾಳ ಕ್ಷೇತ್ರದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ (RV Deshpande) ಅವರನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ (Order) ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ದೇಶಪಾಂಡೆ ಅವರನ್ನು ನೇಮಿಸುವುದರ ಜೊತೆಗೆ ಅವರಿಗೆ ಸಂಪುಟ ದರ್ಜೆ (Cabinet) ಸಚಿವರ ಸ್ಥಾನಮಾನವನ್ನು ನೀಡಲಾಗಿದೆ.
ರಾಜ್ಯದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವುದು, ಸಾರ್ವಜನಿಕ ಸೇವೆಗಳ ಗುಣಮಟ್ಟ ಹೆಚ್ಚಿಸುವುದು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಬಲಪಡಿಸುವುದು ಆಯೋಗದ ಪ್ರಮುಖ ಉದ್ದೇಶಗಳಾಗಿವೆ.
ವಿವಿಧ ಇಲಾಖೆಗಳ ಕಾರ್ಯವೈಖರಿ, ಸರ್ಕಾರಿ ಸಂಸ್ಥೆಗಳ ರಚನೆ, ಸಿಬ್ಬಂದಿ ನಿಯೋಜನೆ, ಸೇವಾ ವಿತರಣಾ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ಶಿಫಾರಸುಗಳನ್ನು ನೀಡುವ ಜವಾಬ್ದಾರಿ ಆಯೋಗದ್ದಾಗಿದೆ.


