ತುರುವೇಕೆರೆ : ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಂತೋಷ್ ಕಂಟ್ಲಿ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷ ದೊರೈರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸಂತೋಷ್ ಕಂಟ್ಲಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಸಂತೋಷ್ ಕಂಟ್ಲಿ ಅವರು ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.
ನೂತನ ಅಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಅಭಿಮಾನಿಗಳು, ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷ ಸಂತೋಷ್ ಕಂಟ್ಲಿ ಮಾತನಾಡಿ, ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿರ್ದೇಶಕರ ಸಹಕಾರದೊಂದಿಗೆ ಸಂಘದ ಸದಸ್ಯರು, ರೈತರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ದೊರಕಿಸಿಕೊಡಲು ಶ್ರಮಿಸುತ್ತೇನೆ ಎಂದರು.
ನೂತನ ಅಧ್ಯಕ್ಷ ಸಂತೋಷ್ ಕಂಟ್ಲಿ ಅವರನ್ನು ಮಾಜಿ ಶಾಸಕರಾದ ಮಸಾಲಾ ಜಯರಾಮ್, ಎಂ. ಡಿ. ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಸಾವಿತ್ರಿ, ನಿರ್ದೇಶಕರಾದ ದೊರೈರಾಜು, ಭೈರಪ್ಪಾಜಿ, ಪಾಂಡುರಂಗೇಗೌಡ, ಕೃಷ್ಣೇಗೌಡ, ಆನಂದ್ ಕುಮಾರ್, ಭಾರತಿ, ಗಂಗಾಧರಯ್ಯ, ನಿಜಗುಣ, ನಾಗರಾಜು, ಶಿವರಾಮಯ್ಯ, ಮೇಲ್ವಿಚಾರಕ ಭರತ್, ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್, ಖಜಾಂಚಿ ಪ್ರಸಾದ್ ಸೇರಿದಂತೆ ಹಲವರು ಅಭಿನಂದಿಸಿದರು.
ವರದಿ : ಗಿರೀಶ್ ಕೆ ಭಟ್

