ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡುವುದಾಗಿ ಬೆಳಿಗ್ಗೆ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಇದರ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಸಂಜೆ 5 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸಲಿದ್ದಾರೆ.
ನಾಗೇಂದ್ರ ಅವರ ರಾಜೀನಾಮೆ ವಿಚಾರದ ಬಿಸಿಯಾದ ಚರ್ಚೆಯ ನಡುವೆಯೇ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದು, ಅವರ ಈ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ ಬೆಳಿಗ್ಗೆ ದೆಹಲಿಗೆ ತೆರಳಲಿದ್ದು, ಅದಕ್ಕೂ ಮುಂಚಿತವಾಗಿಯೇ ಸತೀಶ್ ಜಾರಕಿಹೊಳಿ ದೆಹಲಿ ತಲುಪುತ್ತಿರುವುದು ಹಲವು ರಾಜಕೀಯ ಲೆಕ್ಕಾಚಾರಗಳಿಗೆ ದಾರಿ ಮಾಡಿಕೊಟ್ಟಿದೆ.
ಹೆಚ್ಚುವರಿ ಉಪಮುಖ್ಯಮಂತ್ರಿ ಸ್ಥಾನದ ಬೇಡಿಕೆ ರಾಜ್ಯ ಕಾಂಗ್ರೆಸ್ನಲ್ಲಿ ಮುನ್ನೆಲೆಯಲ್ಲಿದ್ದು, ಹೈಕಮಾಂಡ್ ಭೇಟಿಯ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಈ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.


