ಹನುಮಾನ್ ಮಂದಿರ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ – ಗಿಡಗಳನ್ನು ನೆಡುವುದರ ಜೊತೆಗೆ ಅವುಗಳ ಸಂರಕ್ಷಣೆಯೂ ನಮ್ಮೆಲ್ಲರ ಹೊಣೆ ಎಂದ ಶಾಸಕರು
ಚಿಂಚೋಳಿ : ಚಿಂಚೋಳಿ ಪಟ್ಟಣದ ಹೊರವಲಯದಲ್ಲಿರುವ ಬೊಮ್ಮನಹಳ್ಳಿ ಗ್ರಾಮದ ಹನುಮಾನ್ ಮಂದಿರದ ಆವರಣದಲ್ಲಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಚಿಂಚೋಳಿ ಕ್ಷೇತ್ರದ ಶಾಸಕ ಡಾ. ಅವಿನಾಶ್ ಜಾದವ್, ಸುನಿಲ್ ಚೌವ್ಹಾಣ, ಜಗನ್ನಾಥ ಕೊರಳಿ, ವೀರೇಶ್ ಯಂಪಳ್ಳಿ, ಅಶೋಕ್ ಮಗದಂಪೂರ್, ರವಿ ಉಸುಬಾಯಿ, ನಾರಾಯಣ ನಾಟಿಕರ್, ಕೆ.ಎಂ. ಬಾರಿ, ಜಗನ್ನಾಥ ಗುತ್ತೇದಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಡಾ. ಅವಿನಾಶ್ ಜಾದವ್ ಅವರು, ಅರಣ್ಯ ಇಲಾಖೆಯು ಸಸಿ ವಿತರಣೆ ಹಾಗೂ ನೆಡುವ ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಆಯೋಜಿಸಿರುವುದು ಶ್ಲಾಘನೀಯ. ಗಿಡಮರಗಳನ್ನು ನೆಡುವುದರಿಂದ ಪರಿಸರ ಸಂರಕ್ಷಣೆಯಾಗುವುದರ ಜೊತೆಗೆ ಮಳೆ ಪ್ರಮಾಣ ಹೆಚ್ಚಳಕ್ಕೂ ಸಹಕಾರಿಯಾಗುತ್ತದೆ. ಕಲಬುರಗಿ ಜಿಲ್ಲೆಯಲ್ಲಿಯೇ ಚಿಂಚೋಳಿ ತಾಲೂಕು ಅತಿ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ತಾಲೂಕಾಗಿದ್ದು, ತನ್ನ ನೈಸರ್ಗಿಕ ಸೌಂದರ್ಯದಿಂದ 'ಮಲೆನಾಡು ಚಿಂಚೋಳಿ' ಎಂಬ ಹೆಗ್ಗಳಿಕೆಯನ್ನು ಪಡೆದಿದೆ ಎಂದು ತಿಳಿಸಿದರು.
ಗಿಡಗಳನ್ನು ನೆಡುವುದು ಮಾತ್ರವಲ್ಲದೆ, ಅವುಗಳನ್ನು ಸಂರಕ್ಷಿಸಿ ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಿದಾಗ ಮಾತ್ರ ಹಸಿರು ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಲು ಸಾಧ್ಯವಾಗುತ್ತದೆ ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ವರದಿ : ಸುನೀಲ ಸಲಗರ


