ಕಾಗವಾಡ: ಪಟ್ಟಣದಲ್ಲಿ ಬುಧವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ವ್ಯಾಪಕ ಹಾನಿಯಾಗಿದ್ದು.ಪಟ್ಟಣದ ಸುತ್ತಮುತ್ತ ಸುಮಾರು 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.ಕಾಗವಾಡ ಪಟ್ಟಣದ ಬಸ್ ನಿಲ್ದಾಣದ ಎದುರಿರುವ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ನಾಲ್ಕು ಕೊಠಡಿಗಳ ಮೇಲ್ಚಾವಣಿ ಬಿರುಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಶಾಲೆಗೆ ರಜೆ ಇದ್ದ ಕಾರಣ ಯಾವುದೇ ಜೀವಹಾನಿ ಸಂಭವಿಸಿಲ್ಲ ರಭಸವಾಗಿ ಬೀಸಿದ ಗಾಳಿಗೆ ಮರಗಳು ರಸ್ತೆ ಮೇಲೆ ಉರುಳಿ ಕೆಲಕಾಲ ಸಂಚಾರಕ್ಕೆ ಅಡ್ಡಚಣಿ ಉಂಟಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯ ಅಧಿಕಾರಿಗಳು ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದರು. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಮಳೆ ತಂಪು ನೀಡಿದರೂ, ಆಸ್ತಿಪಾಸ್ತಿಗೆ ಉಂಟಾದ ಹಾನಿ ಆತಂಕ ಮೂಡಿಸಿದೆ.
ವರದಿ.:ಚಂದ್ರಕಾಂತ ಕಾಂಬಳೆ


