ಬೆಂಗಳೂರು: ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ ಹಾಗೂ ಕೆಪಿಎಸ್ಸಿ ಕಚೇರಿ ಸೇರಿದಂತೆ ಒಟ್ಟು 21 ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ ಬೆನ್ನಲ್ಲೇ ಈ ಕಾನೂನು ಸಮರ ತೀವ್ರಗೊಂಡಿತ್ತು.
ಈ ಹಿಂದೆ ಜುಲೈ 10ರಂದು ರಾಜ್ಯಪಾಲರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು.
ಆದರೆ, ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯಪಾಲರ ಅಮಾನತು ಆದೇಶ ಕಾನೂನುಬಾಹಿರ ಎಂದು ತೀರ್ಪು ನೀಡಿದೆ.
ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನ ಮತ್ತು ಶಿಫಾರಸನ್ನು ಮಾತ್ರ ಅನುಸರಿಸಬೇಕು. ಈ ಪ್ರಕರಣದಲ್ಲಿ ಸಂಪುಟದ ಸಲಹೆ ಇರಲಿಲ್ಲ ಎಂಬ ಕಾರಣಕ್ಕೆ ಈ ರದ್ದತಿ ಆದೇಶ ಹೊರಬಿದ್ದಿದೆ.


