ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಅಪ್ರಾಪ್ತ ಸಹೋದರಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಶಾಂತಿನಗರದಲ್ಲಿ ನಡೆದಿದೆ.
ಹಣಮಂತಿ (18) ಮತ್ತು ಪೂಜಾ (17) ಎಂದು ಗುರುತಿಸಲಾಗಿದೆ.ಇಬ್ಬರೂ ಶಹಾಬಾದ್ ಪಟ್ಟಣದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹಣಮಂತಿ ಪಿಯುಸಿ ದ್ವಿತೀಯ ವರ್ಷ ಹಾಗೂ ಪೂಜಾ ಪಿಯುಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದರು ಎನ್ನಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇಬ್ಬರೂ ವೇಲ್ ಬಳಸಿ ನೇಣು ಬಿಗಿದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಇಬ್ಬರು ಸಹೋದರಿಯರು ತಮ್ಮ ತಂದೆಯೊಂದಿಗೆ ಶಹಾಬಾದ್ ಪಟ್ಟಣದಲ್ಲಿ ವಾಸಿಸುತ್ತಿದ್ದರು. ತಂದೆ ನಿವೃತ್ತ ಯೋಧರಾಗಿದ್ದು, ಸಹೋದರ ತೆಲಂಗಾಣದಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಹಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದುಬಂದ ಬಳಿಕ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಸಹೋದರಿಯರ ಸಾವಿಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.


