ಚೇಳೂರು : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಸೋಮವಾರ ಪಿಡಿಒ ಕೆ. ವೆಂಕಟಾಚಲಪತಿ ಅವರ ನೇತೃತ್ವದಲ್ಲಿ ಚೇಳೂರಿನ ವಿವಿಧ ಪ್ರದೇಶಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮದ ಪ್ರಮುಖ ರಸ್ತೆ ಬದಿಗಳು, ಖಾಲಿ ನಿವೇಶನಗಳು, ಚರಂಡಿ ಪಕ್ಕಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿದ್ದ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಮಲಿನ ವಸ್ತುಗಳನ್ನು ಸಿಬ್ಬಂದಿ ತೆರವುಗೊಳಿಸಿದರು. ಟ್ರ್ಯಾಕ್ಟರ್ ಹಾಗೂ ವಾಹನಗಳ ಮೂಲಕ ಕಸವನ್ನು ಸಾಗಿಸಿ ವಿಲೇವಾರಿ ಮಾಡಲಾಯಿತು.
ಈ ವೇಳೆ ಮಾತನಾಡಿದ ಪಿಡಿಒ ಕೆ. ವೆಂಕಟಾಚಲಪತಿ, ಗ್ರಾಮವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಸಾರ್ವಜನಿಕರು ಮನೆ ಬಳಿಯ ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಗ್ರಾಮ ಪಂಚಾಯಿತಿ ಸೂಚಿಸಿರುವ ಸ್ಥಳಗಳಲ್ಲೇ ಹಾಕಬೇಕು. ಪರಿಸರ ಸಂರಕ್ಷಣೆ ಹಾಗೂ ಆರೋಗ್ಯಕರ ಜೀವನಕ್ಕಾಗಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು.
ಗ್ರಾಮದಲ್ಲಿ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಹ ಗ್ರಾಮ ಪಂಚಾಯಿತಿಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸ್ವಚ್ಛತಾ ಕಾರ್ಯದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಿಲ್ ಕಲೆಕ್ಟರ್ ಮಂಜುನಾಥ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಜರಿದ್ದರು.
ವರದಿ :ಯಾರಬ್. ಎಂ.


