ಬೆಂಗಳೂರು : ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್ ಇದರಲ್ಲಿ 16,000 ಕೋಟಿ ರೂ. ಗ್ರಾಮೀಣಾಭಿವೃದ್ಧಿ ಯೋಜನೆಯಾಗಿದ್ದು, ಉಳಿದ ಮೊತ್ತ ಕರಾವಳಿ ಜಿಲ್ಲೆಗಳಿಗೆ ಸಂಬಂಧಿಸಿದೆ ಎಂದು ವಿವರಿಸಿದರು.
ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು
ನಮ್ಮ ಸರ್ಕಾರ ಜನರ ಭಾವನೆಯನ್ನು ಗೌರವಿಸಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಭಾಷೆ ಎರಡನೇ ಆಡಳಿತ ಭಾಷೆಯಾಗಿ ಘೋಷಣೆಯಾಗಬೇಕೆನ್ನುವ ಬೇಡಿಕೆ ಬಹಳ ದಿನಗಳದ್ದು. ಹಿಂದಿನವರು ಈ ತೀರ್ಮಾನ ಏಕೆ ಮಾಡಲಿಲ್ಲ ಎಂದು ಚರ್ಚಿಸುವುದಿಲ್ಲ. ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ. ಸಭೆಯಲ್ಲಿ ಅನೇಕ ಸಲಹೆಗಳು ಬಂದಿವೆ.
ನಮಗೆ ಬದ್ಧತೆ ಇದೆ. ನಾವು ಜನರ ಭಾವನೆ ಮೇಲಲ್ಲ; ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಭಾವನೆಗಳ ಆಧಾರದ ಮೇಲೆ ಸಮಾಜ ಕಟ್ಟಲ್ಲ. ಸಾಮಾಜಿಕ ಆರ್ಥಿಕ ಶಕ್ತಿ ತುಂಬಿ ಬದುಕು ಕಟ್ಟಿಕೊಡಲಾಗುವುದು ಎಂದು ತಿಳಿಸಿದರು.
ಅವಶ್ಯತೆ ಇದ್ದಲ್ಲಿ ಆರ್ಥಿಕ ಹಾಗೂ ಕಾನೂತುಳುಕಟ್ಟು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ತೀರ್ಮಾನ ಮಾಡಿ ಆಗ ಅಗತ್ಯವಿರುವ ವಿಚಾರಗಳ ಬಗ್ಗೆ ತೀರ್ಮಾನಿಸಲಾಗುವುದು. ಇದು ಟೀಮ್ ಕರ್ನಾಟಕ.
ಸಚಿವ ಸಂಪುಟ ನಿಮ್ಮ ಜೊತೆ ಇದೆ. ತುಳು ಭಾಷೆಯನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತವಾಗಿ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ ಮಾಡಲಾಗುವುದು.
ಮಾಜಿ ಸಚಿವ ರಮಾನಾಥ ರೈ ಅವರು ತುಳು ಭಾಷೆಗೆ 2 ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಲು ಮೊದಲು ಬೇಡಿಕೆ ಇಟ್ಟಿದ್ದರು ಎಂದು ಸ್ಮರಿಸಿದರು. ಸಚಿವ ಯು.ಟಿ. ಖಾದರ್, ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವು ಜನಪ್ರತಿನಿಧಿಗಳು ಒಟ್ಟಾಗಿ ಒತ್ತಡ ಹೇರಿದ್ದರು ಎಂದು ಅವರು ತಿಳಿಸಿದರು.
ತುಳು ಭಾಷೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಅಂಗೀಕರಿಸಿದ ಹಿನ್ನೆಲೆಯಲ್ಲಿ ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಮುಖ್ಯಮಂತ್ರಿಗಳು ಅಭಿನಂದಿಸಿದರು.


