ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪಗಳಿಗೆ ಸಂಬಂಧಿಸಿದಂತೆ, ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟವು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆ:
ಜುಲೈ 10 ರಂದು ರಾಜ್ಯಪಾಲರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಸಾಹುಕಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, ರಾಜ್ಯಪಾಲರ ಅಮಾನತು ಆದೇಶವನ್ನು ರದ್ದುಪಡಿಸಿತ್ತು.
ಸಾಂವಿಧಾನಿಕ ವಿಧಿವಿಧಾನಗಳ ಅನ್ವಯ ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತುಗೊಳಿಸಲು ರಾಜ್ಯ ಸಚಿವ ಸಂಪುಟದ ಸ್ಪಷ್ಟ ಸಲಹೆ ಅಥವಾ ಶಿಫಾರಸು ಕಡ್ಡಾಯವಾಗಿದೆ.
ಆದರೆ ಈ ಹಿಂದಿನ ಆದೇಶದ ವೇಳೆ ಸಂಪುಟದಿಂದ ಯಾವುದೇ ಅಧಿಕೃತ ಶಿಫಾರಸು ಇರಲಿಲ್ಲವಾದ್ದರಿಂದ ನಿಯಮ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದ ಹೈಕೋರ್ಟ್, ಏಳು ದಿನಗಳ ಒಳಗಾಗಿ ಅವರನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ನಿರ್ದೇಶನ ನೀಡಿತ್ತು.
ನ್ಯಾಯಾಲಯದ ಆದೇಶದ ಬೆನ್ನಲ್ಲೇ ಸಭೆ ಸೇರಿದ ರಾಜ್ಯ ಸಚಿವ ಸಂಪುಟವು, ಕಾನೂನು ಪ್ರಕ್ರಿಯೆಯನ್ನು ಸರಿಯಾಗಿ ಪಾಲಿಸುವ ನಿಟ್ಟಿನಲ್ಲಿ ಅಧ್ಯಕ್ಷರ ಅಮಾನತಿಗೆ ಸಾಂವಿಧಾನಿಕವಾಗಿ ರಾಜ್ಯಪಾಲರಿಗೆ ಶಿಫಾರಸು ಕಳುಹಿಸಲು ನಿರ್ಣಯ ಕೈಗೊಂಡಿದೆ. ಈ ಮೂಲಕ ಕೆಪಿಎಸ್ಸಿ ಅಧ್ಯಕ್ಷರ ಅಮಾನತು ಪ್ರಕ್ರಿಯೆಗೆ ರಾಜ್ಯ ಸರ್ಕಾರ ಹೊಸ ತಿರುವು ನೀಡಿದೆ.


