ಬೆಂಗಳೂರು : ಪಶ್ಚಿಮ ಘಟ್ಟಗಳ ಭಾಗಗಳನ್ನು ಕಸ್ತೂರಿರಂಗನ್ ಸಮಿತಿಯ ಶಿಫಾರಸಿನ ಆಧಾರದ ಮೇಲೆ 'ಪರಿಸರ ಸೂಕ್ಷ್ಮ ಪ್ರದೇಶ' (ESA) ಎಂದು ಘೋಷಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯ ಕುರಿತು ಚರ್ಚಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಒಂದು ದಿನದ ವಿಶೇಷ ಶಾಸನಸಭೆ ಅಧಿವೇಶನವನ್ನು ಕರೆಯಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಪ್ರಕಟಿಸಿದ್ದಾರೆ.
ಕಾಂಗ್ರೆಸ್ ಎಂಎಲ್ಸಿಗಳು ಹಾಗೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳೊಂದಿಗೆ ನಡೆಸಿದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದ ಕುರಿತು ಸರ್ವಪಕ್ಷ ಮಟ್ಟದ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಕಸ್ತೂರಿರಂಗನ್ ವರದಿ ಆಧರಿಸಿ ಕೇಂದ್ರ ಹೊರಡಿಸಿರುವ 7 ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು. ಕೇಂದ್ರವು 6 ರಾಜ್ಯಗಳಾದ್ಯಂತ 56,000 ಚದರ ಕಿ.ಮೀ ಪ್ರದೇಶವನ್ನು ಇಎಸ್ಎ ಎಂದು ಘೋಷಿಸಲು ಪ್ರಸ್ತಾವನೆ ಸಲ್ಲಿಸಿದ್ದು, ಇದರಲ್ಲಿ ಕರ್ನಾಟಕ ಒಂದರಲ್ಲೇ 10 ಜಿಲ್ಲೆಗಳ 33 ತಾಲೂಕುಗಳು ಹಾಗೂ 1,449 ಗ್ರಾಮಗಳನ್ನು ಒಳಗೊಂಡ 20,668 ಚದರ ಕಿ.ಮೀ ಪ್ರದೇಶವನ್ನು ಸೇರಿಸಲಾಗಿದೆ.
ಈ ನಿರ್ಧಾರದಿಂದ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಮಡಿಕೇರಿ, ಹಾಸನ, ಕಾರವಾರ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳ ರೈತರ ಜೀವನೋಪಾಯ ಹಾಗೂ ಮುಂಬರುವ ಅಭಿವೃದ್ಧಿ ಕಾರ್ಯಗಳ ಮೇಲೆ ತೀವ್ರ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


