ಬೆಂಗಳೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಶಿಸ್ತು, ಜವಾಬ್ದಾರಿ ಹಾಗೂ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿಯ ನಿಸರ್ಗ ಹೈಸ್ಕೂಲ್ನಲ್ಲಿ ನಡೆದ 2026ನೇ ಸಾಲಿನ ವಿದ್ಯಾರ್ಥಿಗಳ ಅಧಿಕಾರ ಹಸ್ತಾಂತರ ಹಾಗೂ ಪ್ರತಿಜ್ಞಾ ಸ್ವೀಕಾರ ಸಮಾರಂಭ ಕಾರ್ಯಕ್ರಮಕ್ಕೆ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ, ರಾಜಗೋಪಾಲನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಾರುತಿ ಅಗಸಿಮನಿ ಹಾಗೂ ಕೈಗಾರಿಕೋದ್ಯಮಿ ಬಿ ಸತ್ಯನಾರಾಯಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ನಿಸರ್ಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ, ಮಾಜಿ ಬಿಬಿಎಂಪಿ ಸದಸ್ಯ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್.ಎನ್. ಗಂಗಾಧರ್ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಶಾಲೆಯ ವಿವಿಧ ವಿದ್ಯಾರ್ಥಿ ನಾಯಕರು ಹಾಗೂ ಪದಾಧಿಕಾರಿಗಳಿಗೆ ಜವಾಬ್ದಾರಿಗಳನ್ನು ಹಸ್ತಾಂತರಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಕರ್ತವ್ಯವನ್ನು ಪ್ರಾಮಾಣಿಕತೆ , ಶಿಸ್ತಿನಿಂದ, ನಿಸ್ವಾರ್ಥ ಮನೋಭಾವದಿಂದ ನಿರ್ವಹಿಸುವಂತೆ ಪ್ರತಿಜ್ಞೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, "ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ. ಶಾಲೆಯಲ್ಲಿ ದೊರೆಯುವ ಇಂತಹ ಜವಾಬ್ದಾರಿಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುತ್ತವೆ. ನಾಯಕತ್ವ ಎಂದರೆ ಕೇವಲ ಅಧಿಕಾರವನ್ನು ಅನುಭವಿಸುವುದಲ್ಲ, ಇತರರನ್ನು ಗೌರವಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಎಲ್ಲರನ್ನು ಒಗ್ಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.
ರಾಜಗೋಪಾಲನಗರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಮಾರುತಿ ಅಗಸಿಮನಿ ಮಾತನಾಡಿ, "ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಹಾಗೂ ಕಾನೂನು ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇಂದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಜವಾಬ್ದಾರಿಯನ್ನು ಮುಂದಿನ ದಿನಗಳಲ್ಲಿ ಉತ್ತಮ ನಾಗರಿಕರಾಗಿ ಹಾಗೂ ಜವಾಬ್ದಾರಿಯುತ ನಾಯಕರಾಗಿ ರೂಪುಗೊಳ್ಳಲಿ ಎಂದು ವಿದ್ಯಾರ್ಥಿಗಳಿಗೆ ಸಬ್ ಇನ್ಸ್ಪೆಕ್ಟರ್ ಮಾರುತಿ ಅಗಸಿಮನಿ ಮಾರ್ಗದರ್ಶನ ನೀಡಿದರು.
ನಿಸರ್ಗ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ಎಚ್.ಎನ್. ಗಂಗಾಧರ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಕೇವಲ ಪಠ್ಯಾಧಾರಿತ ಶಿಕ್ಷಣ ನೀಡುವುದಷ್ಟೇ ಸಂಸ್ಥೆಯ ಉದ್ದೇಶವಲ್ಲ. ಉತ್ತಮ ವ್ಯಕ್ತಿತ್ವ, ನಾಯಕತ್ವ ಗುಣ, ಶಿಸ್ತು, ಸಾಮಾಜಿಕ ಸಾಂಸ್ಕೃತಿಕ ಜವಾಬ್ದಾರಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಕೂಡ ಶಿಕ್ಷಣದ ಪ್ರಮುಖ ಭಾಗವಾಗಿದೆ. ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಪ್ರಮುಖ ಹಂತವಾಗಿದ್ದು, ಈ ಅವಧಿಯಲ್ಲಿ ಉತ್ತಮ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣಗಳು ಸೇರಿದಂತೆ ಆಧುನಿಕ ತಂತ್ರಜ್ಞಾನವನ್ನು ಜವಾಬ್ದಾರಿಯಿಂದ ಬಳಸಬೇಕು. ಯಾವುದೇ ರೀತಿಯ ಕೆಟ್ಟ ಚಟಗಳಿಗೆ ಒಳಗಾಗದೆ, ತಮ್ಮ ಭವಿಷ್ಯದ ಗುರಿಯತ್ತ ಗಮನ ಹರಿಸಬೇಕು", ಎಂದು ಹೇಳಿದರು.
ಪ್ರತಿಜ್ಞಾ ಸ್ವೀಕಾರ ಸಮಾರಂಭದ ವೇಳೆ ವಿದ್ಯಾರ್ಥಿಗಳಲ್ಲಿ ವಿಶೇಷ ಉತ್ಸಾಹ ಹಾಗೂ ಹೆಮ್ಮೆಯ ವಾತಾವರಣ ಕಂಡುಬಂತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ನೂತನ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು.
ವರದಿ: ಅಯ್ಯಣ್ಣ ಮಾಸ್ಟರ್


