ತುರುವೇಕೆರೆ : ಸರ್ಕಾರ ವಿದ್ಯಾರ್ಥಿಗಳ ಸರ್ವತೋಮುಖ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಹತ್ತಾರು ಸೌಲಭ್ಯಗಳನ್ನು ನೀಡುತ್ತಿದ್ದು, ಅವುಗಳನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ಅಧ್ಯಯನ ಮಾಡಿ ಯಶಸ್ಸಿನ ಶಿಖರವನ್ನೇರಿ ಸಾಧಕರಾಗಿ ಕಂಗೊಳಿಸಬೇಕೆAದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದುದು. ಅಧ್ಯಯನದ ಕಾಲದಲ್ಲಿ ಏಕಾಗ್ರತೆ, ತಾಳ್ಮೆ ವಹಿಸಿ ಅಧ್ಯಯನ ಮಾಡಬೇಕು. ಅಧ್ಯಯನಶೀಲರಾಗುವುದರ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕು. ಸಂಸ್ಕಾರವಿಲ್ಲದ ವಿದ್ಯೆ ನಿರರ್ಥಕವಾಗುತ್ತದೆ. ಯಶಸ್ವಿ ವ್ಯಕ್ತಿಯಾಗಬೇಕಾದರೆ ಶಿಕ್ಷಣದ ಜೊತೆಗೆ ಸಂಸ್ಕಾರವೂ ಬಹಳ ಮುಖ್ಯವಾಗಿದೆ ಎಂದರು.
ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಶ್ರೀನಾಥ್ ಬಾಬು ಮಾತನಾಡಿ, ಬಾಲ್ಯದಲ್ಲಿ ಕಲಿತ ವಿದ್ಯೆ ಜೀವನದ ಕೊನೆಯವರೆಗೂ ನಿಮ್ಮನ್ನು ರಕ್ಷಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಕಡೆಗೆ ಹೆಚ್ಚಿನ ಒತ್ತನ್ನು ನೀಡಬೇಕು. ಪೋಷಕರ ಕನಸನ್ನು ನನಸು ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂಬುದನ್ನು ಅರಿತು ವ್ಯಾಸಂಗ ಮಾಡಬೇಕು. ಸಮಾಜದಲ್ಲಿ ಸಾಧಕರಾಗಿ ಹೊರಹೊಮ್ಮಬೇಕಾದರೆ ಶಿಕ್ಷಣ ಬಹಳ ಮುಖ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಯಟ್ ಹಿರಿಯ ಉಪನ್ಯಾಸಕ ಮಹೇಶ್, ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಆದರೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರೇ ಇಂದು ನಮಗೆ ಆದರ್ಶನಿಯ ವ್ಯಕ್ತಿಗಳಾಗಿದ್ದಾರೆ. ಸರ್ಕಾರ ಉಚಿತ ಶಿಕ್ಷಣ, ಸಮವಸ್ತç, ದಾಸೋಹ ಎಲ್ಲವನ್ನೂ ನೀಡಿ ಮಕ್ಕಳ ಸರ್ವತೋಮುಖ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿದೆ. ಉತ್ತಮ ಬೋಧಕರ ನೇಮಿಸಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಿದೆ. ಆದರೂ ಸಹ ಪೋಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಲು ಯೋಚಿಸುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಇನ್ನು ಮುಂದಾದರೂ ಮಕ್ಕಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕೆಂದರು.
ಮೊದಲ ದಿನ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೂ ನೀಡಿ, ಪುಷ್ಪಾರ್ಚನೆ ಮಾಡುವ ಮೂಲಕ ಭವ್ಯ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಸುರೇಶ್, ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ನಂಜೇಗೌಡ, ಉಪಪ್ರಾಂಶುಪಾಲ ವೆಂಕಟೇಶ್, ಸಿ.ಆರ್.ಪಿ.ಸುರೇಶ್, ಸಿದ್ದಪ್ಪ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್

