ನಿರುದ್ಯೋಗಿಗಳಲ್ಲಿ ಆಶಾಭಾವನೆ ಮೂಡಿಸಿದ ಉದ್ಯೋಗ ಮೇಳ; ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಮೇಳವು ನಿರುದ್ಯೋಗಿಗಳಲ್ಲಿ ಆಶಾಭಾವನೆ ಮೂಡಿಸಿದೆ. ಜಿಲ್ಲೆಯಲ್ಲಿ ನಿರುದ್ಯೋಗ ನಿವಾರಣೆಗೆ ಜಿಲ್ಲಾಡಳಿತ ಈ ಮೇಳವನ್ನು ಆಯೋಜಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ಉದ್ಯೋಗವು ತೀರಾ ಅವಶ್ಯಕವಾಗಿದೆ. ಕೆಲವು ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಉದ್ಯೋಗ ಮೇಳದಲ್ಲಿ ಸೌಲಭ್ಯಗಳನ್ನು ಕಲ್ಪಿಸಿಕೊಳ್ಳಲಾಗಿದ್ದು, ನಿರುದ್ಯೋಗಿ ಯುವ ಮಿತ್ರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ ಎಂದು ಉದ್ಯೋಗ ಮೇಳದಲ್ಲಿ ಭಾಗಿಯಾದ ಉದ್ಯೋಗ ಆಕಾಂಕ್ಷಿಗಳು ಹೇಳಿದರು.

693 ಮಂದಿಗೆ ಸ್ಥಳದಲ್ಲೇ ಉದ್ಯೋಗ ಪತ್ರ; ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕ್ರೀಡಾಂಗಣದ ಆವರಣದಲ್ಲಿ ಶನಿವಾರ ನಡೆದ ಬೃಹತ್ ಉದ್ಯೋಗ ಮೇಳದಲ್ಲಿ 65ಕ್ಕೂ ಹೆಚ್ಚು ವಿವಿಧ ಕಂಪನಿಗಳು ಪಾಲ್ಗೊಂಡಿದ್ದು, 6,196 ಅಭ್ಯರ್ಥಿಗಳು ಆನ್ಲೈನ್ ನೋಂದಣಿಯಾಗಿದ್ದು, 693 ಮಂದಿಗೆ ಸ್ಥಳ ದಲ್ಲೇ ಉದ್ಯೋಗ ಪತ್ರ ವಿತರಿಸಲಾಯಿತು. 820 ಅಭ್ಯರ್ಥಿಗಳ ಕಿರು ಪಟ್ಟಿಯನ್ನು ಮಾಡಲಾಗಿದೆ. 1043 ಯುವನಿಧಿ ಫಲಾನುಭವಿಗಳು ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾದ ಶಶಿಕಾಂತ್ ಶಿವಪೂರೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು.ಹುಡೇದ್, ಜಿಲ್ಲಾ ಕೈಗಾರಿಕಾ ಅಧಿಕಾರಿ ಬಸವರಾಜ ಯರಕಂಚಿ, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್, ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಗಾರಲ ದಿನ್ನಿ ವೀರನ ಗೌಡ

