ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಗುವ ಲಕ್ಷಣಗಳು ಕಂಡುಬರುತ್ತಿವೆ.
ಸಂಪುಟ ವಿಸ್ತರಣೆಯ ಕುರಿತಂತೆ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸಲು ಮುಖಂಡರು ನವದೆಹಲಿಗೆ ತೆರಳಿ ಭೇಟಿ ಮಾಡಿದ್ದರು.
ದೆಹಲಿಯಲ್ಲಿ ನಡೆಸಿದ ಸರಣಿ ಸಭೆಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿವೆ.
ದೆಹಲಿ ಪ್ರವಾಸ ಮುಗಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾಳೆ ನೂತನ ಸಚಿವರನ್ನು ಒಳಗೊಂಡ ಹೊಸ ಸಂಪುಟ ರಚನೆಯಾಗಲಿದೆ" ಎಂದು ಪ್ರಮುಖ ಸುಳಿವು ನೀಡಿದ್ದಾರೆ.
ಇದರಿಂದಾಗಿ ಶಾಸಕಾಂಗ ಪಕ್ಷದಲ್ಲಿ ಹಾಗೂ ಸಚಿವ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿದ್ದು, ಯಾರೆಲ್ಲಾ ಹೊಸದಾಗಿ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.


