ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾದಂತಿದೆ.
ಮುಂದಿನ ಹದಿನೈದು ದಿನಗಳ ಒಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಮಹತ್ವದ ಸುಳಿವು ನೀಡಿದ್ದಾರೆ.
ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಸದ್ಯಕ್ಕೆ ನಾವಿಲ್ಲಿ ತಾತ್ಕಾಲಿಕ ಅಷ್ಟೇ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳಿಗೂ ಸಚಿವ ಸ್ಥಾನ ಸಿಗಲಿದೆ," ಎಂದು ಭರವಸೆ ನೀಡಿದರು.
ಬಾಗಲಕೋಟೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, "ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ?" ಎಂದು ಮರುಪ್ರಶ್ನಿಸಿದರು.
ಸಂಪುಟ ವಿಸ್ತರಣೆಯ ಸಂಪೂರ್ಣ ಜವಾಬ್ದಾರಿ ಮತ್ತು ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟಿದ್ದು. ಈ ವಿಷಯದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು, ನನ್ನ ವ್ಯಾಪ್ತಿಯಲ್ಲಿ ಏನೂ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.


